ಲಂಡನ್: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಹೀಗಾಗಿ ತುರ್ತಾಗಿ ಭಾರತಕ್ಕೆ ವಾಪಸಾಗಿದ್ದಾರೆ.
ಗಂಭೀರ್ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಅಭ್ಯಾಸ ಮುಂದುವರೆಸಿದ್ದು, ಈ ವಾರ ಗೌತಮ್ ಗಂಭೀರ್ ಇಂಗ್ಲೆಂಡ್ಗೆ ಮರಳದಿದ್ದರೆ ಹಂಗಾಮಿ ಕೋಚ್ನ ನೇಮಕ ಸಾಧ್ಯತೆಯಿದೆ.
ಜೂನ್ 20 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ತನ್ನ ಸಿದ್ಧತೆಗಳನ್ನು ಚುರುಕುಗೊಳಿಸುವಲ್ಲಿ ನಿರತವಾಗಿದೆ. ಹೊಸ ನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ತಂಡ ಲಂಡನ್ನಲ್ಲಿ ಅಭ್ಯಾಸ ನಡೆಸುತ್ತಿದೆ. ಆದರೆ, ಈ ಅಭ್ಯಾಸದ ವೇಳೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕಾಣಿಸಿಕೊಂಡಿಲ್ಲ.
ಗೌತಮ್ ಗಂಭೀರ್ ಭಾರತಕ್ಕೆ ಹಿಂತಿರುಗುತ್ತಿದ್ದಂತೆ, ಬಿಸಿಸಿಐ ವಿವಿಎಸ್ ಲಕ್ಷ್ಮಣ್ ಅವರನ್ನು ಇಂಗ್ಲೆಂಡ್ಗೆ ಕಳುಹಿಸಿದ್ದಾರೆ. ಅಲ್ಲದೆ ಜೂನ್ 20 ರೊಳಗೆ ಗಂಭೀರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಪರಿಸ್ಥಿತಿ ಇರದಿದ್ದರೆ, ಭಾರತ ತಂಡವು ಲಕ್ಷ್ಮನ್ ಮುಂದಾಳತ್ವದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂತ್ರಗಳನ್ನು ರೂಪಿಸಲಿದೆ.
ಈಗಾಗಲೇ ವಿವಿಎಸ್ ಲಕ್ಷ್ಮಣ್ ಅವರು ಇಂಗ್ಲೆಂಡ್ನಲ್ಲಿರುವ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದ ವೇಳೆ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಅವರೊಂದಿಗೆ ಲಕ್ಷ್ಮಣ್ ಕಾಣಿಸಿಕೊಂಡರು.