ಲೋಕಸಭೆಗೆ ಸ್ಪರ್ಧೆ: ಶಾಸಕ ಸ್ಥಾನಕ್ಕೆ ಗುಡ್‌ಬೈ ಹೇಳಿದ ಶ್ರೀರಾಮುಲು

ಬುಧವಾರ, 19 ಮಾರ್ಚ್ 2014 (15:47 IST)
PTI
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಶ್ರೀರಾಮುಲು ಅವರು ಇಂದು ಬೆಳಗ್ಗೆ ವಿಧಾನಸೌಧದಲ್ಲಿರುವ ಸ್ಪೀಕರ್ ಕಚೇರಿಗೆ ತೆರಳಿ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದರು. ಶ್ರೀರಾಮುಲು ಅವರ ರಾಜಿನಾಮೆಯನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಅಂಗೀಕರಿಸಿದ್ದಾರೆ.

ರಾಜಿನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ತಾವು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.

ಈ ಮಧ್ಯೆ, ಶ್ರೀರಾಮುಲು ಅವರ ಸಹೋದರಿ ಹಾಗೂ ಸಂಸದೆ ಜೆ.ಶಾಂತಾ ಹಾಗೂ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಸಹೋದರರಾದ ಜಿ.ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರ ನಡೆಯೇನು ಎಂಬುದು ಇನ್ನು ನಿಗೂಢವಾಗಿದೆ.

ವೆಬ್ದುನಿಯಾವನ್ನು ಓದಿ