ಟೆಹರಾನ್: ಇಸ್ರೇಲ್ ಮತ್ತು ಇರಾನ್ ದೇಶಗಳ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಸಂಘರ್ಷವೂ ನಾಲ್ಕನೇ ದಿನವೂ ಮುಂದುವರಿದಿದ್ದು, ಉಭಯ ದೇಶಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇಸ್ರೇಲ್ ದೇಶವು ಇರಾನ್ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ದಾಳಿಯನ್ನು ತೀವ್ರಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ದಾಳಿ ನಡೆಸಿದೆ. ಇಸ್ರೇಲ್ನ ಕ್ಷಿಪಣಿ ದಾಳಿಯಿಂದ ಇರಾನ್ನಲ್ಲಿ ಈತನಕ 230 ಮಂದಿ ಮೃತಪಟ್ಟಿದ್ದಾರೆ.
ಇಸ್ರೇಲ್ ಸೇನೆಯು ಆಪರೇಷನ್ ರೈಸಿಂಗ್ ಲಯನ್ ಹೆಸರಿನಡಿ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಇರಾನ್ ಸೇನೆಯ ಅತ್ಯುನ್ನತ ಶ್ರೇಣಿಯ ಅಧಿಕಾರಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕೋರ್ (ಐಆರ್ಜಿಸಿ) ಮುಖ್ಯಸ್ಥ ಹುಸೇನ್ ಸಲಾಮಿ ಅವರು ಶುಕ್ರವಾರ ಮೃತಪಟ್ಟಿದ್ದರು. ನಂತರದಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಮುಂದುವರಿದಿದೆ.
ಟೆಹರಾನ್ನಲ್ಲಿರುವ ಇರಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ಭಾನುವಾರ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ನ ಕ್ಷಿಪಣಿಗಳು, ಇಸ್ರೇಲ್ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ಅಲ್ಲಿನ ಹಲವು ಕಟ್ಟಡಗಳನ್ನು ನಾಶಗೊಳಿಸಿವೆ.
ಇಂದು ಬೆಳಿಗ್ಗೆ ಟೆಹರಾನ್ನ ವಿವಿಧೆಡೆಯೂ ಸ್ಫೋಟಗಳು ಸಂಭವಿಸಿವೆ. ನಾಲ್ಕು ದಿನಗಳ ಸಂಘರ್ಷದಲ್ಲಿ ಇರಾನ್ನಲ್ಲಿ 1,277ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್ ದಾಳಿಯಿಂದಾಗಿ ತೈಲ ಸಂಸ್ಕರಣಾ ಘಟಕಕ್ಕೆ ಹಾನಿಯಾಗಿದೆ. ಗುಪ್ತಚರ ಮುಖ್ಯಸ್ಥ ಮತ್ತು ಇತರ ಇಬ್ಬರು ಜನರಲ್ಗಳನ್ನು ಹತ್ಯೆ ಮಾಡಲಾಗಿದೆ. ಜತೆಗೆ, ಜನವಸತಿ ಪ್ರದೇಶಗಳ ಮೇಲೆ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿಕೊಂಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಇರಾನ್ನ ಪರಮೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ, ಇಸ್ರೇಲ್ ಅನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇರಾನ್ ಕೂಡಾ ಇಸ್ರೇಲ್ ಮೇಲೆ ದಾಳಿ ಮುಂದುವರಿಸಿದೆ.