ನವದೆಹಲಿ: ಚೀನಾ ಮತ್ತು ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧದ ಮೃದು ಧೋರಣೆಯನ್ನು ವಿರೋಧಿಸಿ ಶಾಂಘೈ ಸಹಕಾರ ಸಂಸ್ಥೆಯ ದಾಖಲೆಗೆ ಸಹಿ ಹಾಕಲು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ.
ಶಾಂಘೈ ಸಹಕಾರ ಸಂಸ್ಥೆಯ ಶೃಂಗ ಸಭೆಯಲ್ಲಿ 10 ರಾಷ್ಟ್ರಗಳ ರಕ್ಷಣಾ ಸಚಿವರು ಪಾಲ್ಗೊಂಡಿದ್ದಾರೆ. ಇವರಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಸೇರಿದ್ದಾರೆ. ಚೀನಾದ ಕ್ವಿಂಗ್ಡಾವೊದಲ್ಲಿ ನಡೆಯುತ್ತಿರುವ ಶೃಂಗ ಸಭೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.
ಭಯೋತ್ಪಾದನೆ ವಿರುದ್ಧ ಪಾಕಿಸ್ತಾನ, ಚೀನಾ ಮೃದು ಧೋರಣೆ ಅನುಸರಿಸುತ್ತಿರುವ ಕಾರಣಕ್ಕೆ ಭಾರತದ ರಕ್ಷಣಾ ಸಚಿವರು ಸಹಿ ಹಾಕಲು ನಿರಾಕರಿಸಿದ್ದಾರೆ. ಯಾವುದೇ ದೇಶ ಎಷ್ಟೇ ಶಕ್ತಿಶಾಲಿಯಾಗಿದ್ದರೂ ಅದಕ್ಕೆ ಇತರೆ ದೇಶಗಳ ಬೆಂಬಲ ಬೇಕಾಗುತ್ತದೆ. ಸರ್ವೇ ಜನಾಃ ಸುಖಿನೋ ಭವಂತು ಎಂಬ ಭಾವನೆಯಿರಬೇಕು. ಇದರಿಂದ ಎಲ್ಲರಿಗೂ ಶಾಂತಿ, ನೆಮ್ಮದಿಯಿರುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಯಾವುದೇ ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ. ಭಾರತಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಭಯೋತ್ಪಾದನೆಯನ್ನು ಎಲ್ಲಾ ಎಸ್ ಸಿಒ ರಾಷ್ಟ್ರಗಳು ಒಕ್ಕೊರಲಿನಿಂದ ಖಂಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.