ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ನ 18ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಚೊಚ್ಚಲ ಪ್ರಶಸ್ತಿ ಗೆಲ್ಲಲು ಇನ್ನು ಒಂದು ಹೆಜ್ಜೆಯಷ್ಟೇ ಬಾಕಿಯಿದೆ. ಆರ್ಸಿಬಿ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಈ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ, ಉದ್ಯಮಿ ವಿಜಯ ಮಲ್ಯ ತಂಡಕ್ಕೆ ಸ್ಪೇಷಲ್ ವಿಶ್ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಆರ್ಸಿಬಿ ಅತ್ಯುತ್ತಮ ಆಲ್ ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್ ಗೆಲ್ಲಿ ಎಂದು ಹಾರೈಸಿದ್ದಾರೆ.
ಗುರುವಾರ ರಾತ್ರಿ ನಡೆದ ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್ಸಿಬಿ ಫೈನಲ್ಗೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 14.1 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 101 ರನ್ ಗಳಿಸಿತು. ಆರ್ಸಿಬಿ 10 ಓವರ್ಗೆ ಗುರಿ ತಲುಪಿ ಗೆದ್ದು ಬೀಗಿತು.
ಮಂಗಳವಾರ ಫೈನಲ್ ಹಣಾಹಣಿ ನಡೆಯಲಿದೆ. ಭಾನುವಾರ ನಡೆಯುವ ಎರಡನೇ ಕ್ವಾಲಿಫೈಯರ್ನಲ್ಲಿ ಗೆದ್ದ ತಂಡವು ಫೈನಲ್ನಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ.