ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ರನ್ಯಾ ಮಲತಂದೆಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿದ ಸರ್ಕಾರ

Sampriya

ಭಾನುವಾರ, 16 ಮಾರ್ಚ್ 2025 (10:12 IST)
Photo Courtesy X
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಅವರ ಮಲತಂದೆ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆ ನೀಡಲಾಗಿದೆ.

ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಅವರ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಕೆ.ವಿ. ಶರತ್ ಚಂದ್ರ ಅವರನ್ನು ನೇಮಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ರನ್ಯಾ ಬಂಧನಕ್ಕೊಳಗಾಗಿದ್ದು, ಈ ಪ್ರಕರಣದ ತನಿಖೆಯ ದೃಷ್ಟಿಯಿಂದ ಅವರ ಮಲತಂದೆ ಡಾ.ಕೆ.ರಾಮಚಂದ್ರ ರಾವ್ ಅವರಿಗೆ ಕಡ್ಡಾಯ ರಜೆ ನೀಡಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಚಿನ್ನ ಕಳ್ಳಸಾಗಣೆಯ ವೇಳೆ ವಿಮಾನ ನಿಲ್ದಾಣದ ಅತ್ಯಾಧುನಿಕ ಭದ್ರತೆಯನ್ನು ಬೈಪಾಸ್ ಮಾಡಲು ರಾಜ್ಯ ಪೊಲೀಸ್ ಪ್ರೋಟೋಕಾಲ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ರಾಜ್ಯದ ಪೊಲೀಸ್ ಪ್ರೋಟೋಕಾಲ್ ಸರ್ವಿಸ್ ಸಹಾಯದಿಂದಲೇ ಗೋಲ್ಡ್‌ ಸ್ಮಗ್ಲಿಂಗ್ ನಡೆದಿದೆ. ಇಲ್ಲವಾದರೆ ರನ್ಯಾ ರಾವ್ ಗ್ರೀನ್ ಚಾನಲ್‌ವರೆಗೂ ಬರುವುದು ಅಸಾಧ್ಯವಾಗಿತ್ತು ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ನ್ಯಾಯಾಲಯಕ್ಕೆ ತಿಳಿಸಿದೆ. ಅದರ ಬೆನ್ನಲ್ಲೇ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ನಟಿ ಬಳಿ ಸುಮಾರು ₹15 ಕೋಟಿ ಮೌಲ್ಯದ 14.80 ಕೆಜಿ ಚಿನ್ನ ಪತ್ತೆಯಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ