ಜಯಲಲಿತಾ ಸಾವಿನ ಹಿನ್ನಲೆಯಲ್ಲಿ ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ ರದ್ದು
ಮೈಸೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಸಾವಿನ ಹಿನ್ನಲೆಯಲ್ಲಿ ರಾಜ್ಯದಲ್ಲೂ ಒಂದು ದಿನ ಶೋಕಾಚರಣೆ ನಡೆಸಲಾಗಿದೆ. ಹೀಗಾಗಿ ಮಂಗಳವಾರ ನಡೆಯಬೇಕಿದ್ದ ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿ ಶಂಕು ಸ್ಥಾಪನೆ ಕಾರ್ಯಕ್ರಮ ರದ್ದಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮೈಸೂರಿನ ಹಾಲಾಳು ಗ್ರಾಮದಲ್ಲಿ ಸಮಾಧಿಗೆ ಶಂಕು ಸ್ಥಾಪನೆ ನೆರವೇರಿಸಬೇಕಿತ್ತು. ಆದರೆ ಮುಖ್ಯಮಂತ್ರಿಗಳು ಇಂದು ಜಯಲಲಿತಾ ಅಂತಿಮ ದರ್ಶನ ಪಡೆಯಲು ಚೆನ್ನೈಗೆ ತೆರಳಿದ್ದರು. ಹೀಗಾಗಿ ಶಂಕು ಸ್ಥಾಪನೆ ಕಾರ್ಯ ಸದ್ಯದ ಮಟ್ಟಿಗೆ ಮುಂದೂಡಲಾಗಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಇದೇ ವೇಳೆ ಜಯಲಲಿತಾ ನಿಧನಕ್ಕೆ ಸಂತಾಪ ಸೂಚಿಸಿದ ಭಾರತಿ ವಿಷ್ಣುವರ್ಧನ್ ಸಮಾಧಿ ಸ್ಥಳದಲ್ಲಿ ಪೂಜೆ ಸಲ್ಲಿಸಿದರು. ಶಂಕು ಸ್ಥಾಪನೆ ಸದ್ಯದಲ್ಲೇ ನಡೆಸಲಾಗುವುದು ಎಂದು ಅವರು ಹೇಳಿದರು.