ಬಿಜೆಪಿಗೇ ಗೆಲುವು: ಆರ್. ಆಶೋಕ್ ಭವಿಷ್ಯ

ಶನಿವಾರ, 27 ಡಿಸೆಂಬರ್ 2008 (18:37 IST)
ವಿಧಾನಸಭೆಯ ಎಂಟು ಕ್ಷೇತ್ರಗಳಿಗೆ ಶನಿವಾರ ನಡೆದ ಮತದಾನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಾರಿಗೆ ಸಚಿವ ಆರ್. ಅಶೋಕ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಭೇರಿ ಭಾರಿಸುವ ಮೂಲಕ ಕಾಂಗ್ರೆಸ್‌‌ಗೆ ಮುಖಭಂಗವಾಗಲಿದೆ ಎಂದು ತಿಳಿಸಿದ್ದಾರೆ.

ಮಧುಗಿರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಸಿಗದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ ಸೊಸೆಯನ್ನು ಕಣಕ್ಕಿಳಿಸಿದ್ದಾರೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಬಿಜೆಪಿ ಮಾಡಿರುವ ಸಾಧನೆಯೇ ಚುನಾವಣೆಯಲ್ಲಿ ಪಕ್ಷಕ್ಕೆ ಜಯ ತಂದುಕೊಡಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಮುಂದಿನ ರಾಜಕೀಯದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯಾವ ಪಕ್ಷದಲ್ಲಿರಬೇಕೆನ್ನುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು, ಆ ಸಾಮರ್ಥ್ಯ ಅವರಿಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ