ಇಂದು ಬಿಜೆಪಿ ಕೋರ್ ಕಮಿಟಿ ಸಭೆ: ಬಿಎಸ್‌ವೈ ವಿಚಾರ ಚರ್ಚೆ

ಶನಿವಾರ, 29 ಜೂನ್ 2013 (12:17 IST)
PR
PR
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆ ತರುವ ವಿಚಾರ ಶನಿವಾರ ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರಲಿದೆ.

ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆತರುವ ಬಗ್ಗೆ ಈಗಾಗಲೇ ಪ್ರಯತ್ನ ತೀವ್ರಗೊಂಡಿದೆ. ಶಾಸಕರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಸದಾನಂದಗೌಡ, ಸಂಸದ ಡಿ.ಬಿ.ಚಂದ್ರೇಗೌಡ ಮೊದಲಾದವರು ಪ್ರಯತ್ನ ಆರಂಭಿಸಿದ್ದು, ಸಭೆ ಬಳಿಕ ಹೈಕಮಾಂಡ್ ಅಂಗಳಕ್ಕೆ ಈ ವಿಚಾರ ಕೊಂಡೊಯ್ಯಲು ಸಿದ್ಧತೆ ನಡೆದಿದೆ. ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವುದರಿಂದ ಆಗುವ ಲಾಭದ ಜತೆಗೆ, ತೊಂದರೆ ಬಗ್ಗೆಯೂ ಚರ್ಚೆ ನಡೆದಿದೆ. ಅವರನ್ನು ಪಕ್ಷಕ್ಕೆ ಕರೆ ತರುವುದಕ್ಕೆ ಬೆಂಬಲ ನೀಡುವಷ್ಟೇ ಪ್ರಮಾಣದಲ್ಲಿ ವಿರೋಧಿಸುವವರೂ ಇದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬೆಲೆ ಕೊಡಲು ಮುಖಂಡರು ಮುಂದಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಸಂಸದ ಅನಂತ್‌ಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಕೆ.ಎಸ್.ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್‌ಎಸ್‌ಎಸ್ ಮುಖ್ಯಸ್ಥ ಸಂತೋಷ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದು, ಈ ಬಗ್ಗೆ ಚರ್ಚೆ ನಡೆಯಲಿದೆ.

ವೆಬ್ದುನಿಯಾವನ್ನು ಓದಿ