ಸಂಪುಟದಲ್ಲಿ ಹೊಸಬರಿಗೆ ಅವಕಾಶ: ಕೆ.ಎಸ್.ಈಶ್ವರಪ್ಪ

ಮಂಗಳವಾರ, 31 ಆಗಸ್ಟ್ 2010 (17:37 IST)
ಭಾರತೀಯ ಜನತಾ ಪಕ್ಷವನ್ನು ಶಿಸ್ತುಬದ್ಧವಾಗಿ ಮತ್ತು ಸದೃಢವಾಗಿ ಸಂಘಟಿಸುವಂತಹ ವ್ಯಕ್ತಿಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದ ರಾಜೇಂದ್ರ ಭವನದಲ್ಲಿ ಬಿಜೆಪಿ, ಎಸ್ಸಿ, ಎಸ್ಪಿ ಮೋರ್ಚಾ ರಾಜ್ಯ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷವನ್ನು ಬೆಳೆಸುವಂತಹ ವ್ಯಕ್ತಿಗಳ ಅವಶ್ಯಕತೆ ಇರುವುದರಿಂದ ಮುಂದಿನ ಸಚಿವ ಸಂಪುಟ ರಚನೆಯಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.

ಅಲ್ಲದೇ ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಶಾಸಕರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳಿಸುವಂತಹ ವಾತಾವರಣ ಸೃಷ್ಟಿ ಮಾಡುವುದು ನಮ್ಮ ಮುಂದಿರುವ ಪ್ರಶ್ನೆಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಹುಮ್ಮಸ್ಸು, ಉತ್ಸಾಹ ಬೆಳೆಸಲು ಸಿದ್ದತೆ ನಡೆಸಲಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್ 13ರಂದು ನಡೆಯುವ ಕಡೂರ್ ಮತ್ತು ಗುಲ್ಬರ್ಗಾ ಉಪ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಸಂಪುಟದಲ್ಲಿರುವ ಕೆಲವರನ್ನು ಪಕ್ಷದ ಸಂಘಟನೆಗೆ ತೆಗೆದುಕೊಂಡು ಕೆಲವು ಉತ್ಸಾಹಿ ಶಾಸಕರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ವೆಬ್ದುನಿಯಾವನ್ನು ಓದಿ