ಸಿದ್ದರಾಮಯ್ಯ v/s ಪರಮೇಶ್ವರ್: ಇತ್ಯರ್ಥಕ್ಕಾಗಿ ಸೋನಿಯಾ ಭೇಟಿ

ಶುಕ್ರವಾರ, 6 ಏಪ್ರಿಲ್ 2012 (19:26 IST)
PR
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ತಲೆದೋರಿರುವ ಗುಂಪುಗಾರಿಕೆ ಹಾಗೂ ಅಸಮಾಧಾನ ನಿವಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಭುಗಿಲೇಳುತ್ತಿರುವ ಸುಳಿವು ಪಡೆದ ಸೋನಿಯಾ ಗಾಂಧಿ, ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದರು.

ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮಗಳನ್ನು ರೂಪಿಸುವಾಗ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ಎಲ್ಲವನ್ನೂ ಏಕಪಕ್ಷೀಯವಾಗಿ ನಿರ್ಧಾರ ಮಾಡುತ್ತಾರೆ ಎಂಬ ಬಗ್ಗೆ ಸೋನಿಯಾಗಾಂಧಿ ಅವರಿಗೆ ದೂರು ನೀಡಲು ಸಿದ್ದರಾಮಯ್ಯ ದಿಢೀರ್ ದೆಹಲಿಗೆ ಭೇಟಿ ನೀಡಿದ್ದರು.

ಈ ವಿಚಾರವನ್ನು ತಿಳಿದ ಪರಮೇಶ್ವರ್ ಅವರೂ ದೆಹಲಿಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಸಿದ್ದರಾಮಯ್ಯ ದೆಹಲಿಗೆ ಬರುವ ವಿಷಯ ತಿಳಿದ ಸೋನಿಯಾಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರೇ ಪರಮೇಶ್ವರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆನ್ನಲಾಗಿದೆ.

ಕಾಂಗ್ರೆಸ್‌ಗೆ ಬನ್ನಿ, ಬದಲಾವಣೆ ತನ್ನಿ ಎಂಬ ಧ್ಯೇಯ ವಾಕ್ಯದೊಂದಿಗೆ ಪರಮೇಶ್ವರ್ ರೂಪಿಸಿರುವ ಕಾರ್ಯಕ್ರಮದ ಬಗ್ಗೆ ತಮ್ಮೊಂದಿಗೆ ಚರ್ಚಿಸಿಲ್ಲ. ಏಕಾಏಕಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೈಕಮಾಂಡ್‌ಗೆ ದೂರು ನೀಡಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು ಎಂದು ಮೂಲಗಳು ಹೇಳಿವೆ.

ವೆಬ್ದುನಿಯಾವನ್ನು ಓದಿ