ವರುಣನ ಆರ್ಭಟಕ್ಕೆ 40 ಗ್ರಾಮ ಸಂಪರ್ಕ ಕಡಿತ

ಗುರುವಾರ, 20 ಜುಲೈ 2023 (12:31 IST)
ಬೆಳಗಾವಿ : ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದ ಹಾಲತ್ರಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
 
ಖಾನಾಪುರ ತಾಲೂಕಿನ ಅಶೋಕ ನಗರದ ಬಳಿ ಪ್ರವಾಹ ಭೀತಿ ಎದುರಾಗಿದ್ದು ಸೇತುವೆ ಮುಳುಗುವ ಆತಂಕ ಎದುರಾಗಿದೆ. ಸೇತುವೆ ಮುಳುಗಿದರೆ 40 ಹಳ್ಳಿಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ.

ಸೇತುವೆ ಮುಳುಗಿದರೆ ಹೆಮ್ಮಡಗಾ, ಅಶೋಕ ನಗರ, ಗವಾಳಿ, ಪಾಸ್ತೊಳಿ ಸೇರಿದಂತೆ 40 ಗ್ರಾಮಗಳಿಗೆ ಸಂಪರ್ಕ ಕಡಿತಗೊಳ್ಳಲಿದೆ. ಸೇತುವೆ ಮುಳುಗಡೆಗೆ ಕೇವಲ ಅರ್ಧ ಅಡಿಯಷ್ಟೇ ನೀರು ಬಾಕಿ ಇದೆ. ಸೇತುವೆಯ ಎತ್ತರ ಹೆಚ್ಚಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆ ಏಳು ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಲಪ್ರಭಾ, ಘಟಪ್ರಭಾ, ಕೃಷ್ಣಾ ನದಿ ಸೇರಿ ಏಳು ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಮೇಲೆ ನಿಗಾ ಇಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ 83 ಸಂಪರ್ಕ ಸೇತುವೆಗಳ ಮೇಲೆ ಜಿಲ್ಲಾ ಪೊಲೀಸರು ನಿಗಾ ಇಟ್ಟಿದ್ದಾರೆ. ನಗರಕ್ಕೆ, ಗ್ರಾಮಗಳಿಗೆ ಸಂಪರ್ಕಿಸುವ ಸೇತುವೆ ಮುಳುಗುವ ಭೀತಿ ಹಿನ್ನೆಲೆ ಆಯಾ ಠಾಣಾ ಪೊಲೀಸರು ನದಿ, ಹಳ್ಳಕ್ಕೆ ಕಟ್ಟಿರುವ ಸೇತುವೆ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ತಿಳಿಸಿದ್ದು ನದಿಗಳ ಮೇಲೆ ಎಚ್ಚರಿಕೆಯಿಂದ ಓಡಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ