ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೇಣುಗೋಪಾಲ್

ಶನಿವಾರ, 14 ಅಕ್ಟೋಬರ್ 2017 (14:56 IST)
ಬೆಂಗಳೂರು: ನನ್ನ ವಿರುದ್ಧ ಕೇಳಿಬಂದಿರುವ ಆರೋಪ ಸುಳ್ಳು. ಒಂದು ವೇಳೆ ನಾನು ತಪ್ಪು ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಬೆಂಗಳೂರಿನಿಂದ ಕೇರಳದ ಆಲೆಪ್ಪಿಗೆ ನೂತನ ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಇದೂವರೆಗೆ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಈ ರೀತಿಯ ಆರೋಪಗಳನ್ನು ಪ್ರತಿಪಕ್ಷಗಳು ಮೊದಲಿನಿಂದಲೂ ಮಾಡಿಕೊಂಡು ಬಂದಿವೆ. ನಾನು ಚುನಾವಣೆಗೆ ನಿಂತಾಗ ಹೆಚ್ಚು ಅಪಪ್ರಚಾರ ಮಾಡಿದ್ದರು. 36 ಕ್ರಿಮಿನಲ್ ಕೇಸ್ ಇರುವ ಮಹಿಳೆ ನನ್ನ ಬಗ್ಗೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎನ್ನಲಾಗುತ್ತಿದೆ. ಅವರ ವಿರುದ್ಧ ಎರ್ನಾಕುಲಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ನಾನು ತಪ್ಪು ಮಾಡಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಬಿಜೆಪಿ ನಾಯಕರು ರೋಷನ್ ಬೇಗ್‌ ಗಿಂತ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿದ್ದೇನೆ. ರೋಷನ್ ಬೇಗ್ ಉದ್ದೇಶಪೂರ್ವಕವಾಗಿ ಮಾತನಾಡಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಹ ಇಂತಹ ಪದ ಬಳಕೆ ಸರಿಯಲ್ಲ ಎಂದರು.

ರಾಹುಲ್ ಗಾಂಧಿ ಕೆಲವೇ ದಿನಗಳಲ್ಲಿ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ. ಕೆಪಿಸಿಸಿ ಸಹ ಇದರ ಪರವಾಗಿದೆ ಎಂದು ರಾಹುಲ್ ಪರ ವೇಣುಗೋಪಾಲ್ ಬ್ಯಾಟ್ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ