ವಾಯುಭಾರ ಕುಸಿತದ ಎಫೆಕ್ಟ್: ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ

ಭಾನುವಾರ, 7 ನವೆಂಬರ್ 2021 (20:28 IST)
ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ  ಮಳೆಯ ಅಬ್ಬರ ಇರಲಿದೆ. ಮಂಗಳವಾರದ ಬಳಿಕ ರಾಜ್ಯಾದ್ಯಂತ ಮಳೆ ಕಡಿಮೆ ಆಗಲಿದೆ ಎಂದು  ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ. 
 
ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಗೆ ಕಾರಣವಾಗಿದ್ದು, ಇದರ ಪ್ರಭಾವ ಇನ್ನೆರಡು ದಿನ ಇರಲಿದೆ. ಭಾನುವಾರ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೊ ಅಲರ್ಟ್‌ ನೀಡಲಾಗಿದೆ ಎಂದಿದ್ದಾರೆ. 
 
ಸೋಮವಾರ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ. ಉಳಿದಂತೆ ರಾಜ್ಯದ  ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ