ಮೈಸೂರಿನ ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣು: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಗುರುವಾರ, 2 ಜುಲೈ 2015 (13:24 IST)
ಜುಲೈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಾಕಿ ಹಣವನ್ನು ಪಾವತಿಸಲಿದೆ ಎಂಬ ಭರವಸೆಯನ್ನು ಸರ್ಕಾರ ನೀಡಿದ್ದರೂ ಕೂಡ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. 
 
ಜಿಲ್ಲೆಯ ಹುಣಸೂರು ತಾಲೂಕಿನ ಕಿರಂಗೂರು ಗ್ರಾಮದ ಅಂಗಡಿ ರಾಜೇಗೌಡ(52) ಎಂಬ ರೈತ ಇಂದು ಆತ್ಮಹತ್ಯೆಗೆ ಶರಣಾಗಿದ್ದು, ಈತ 5 ಲಕ್ಷ ಸಾಲ ಮಾಡಿಕೊಂಡಿದ್ದ. ಆದರೆ ಮೂರು ಎಕರೆ ಆಸ್ತಿ ಹೊಂದಿದ್ದ ಈತ, ಐದು ಲಕ್ಷ ಸಾಲ ತೀರಿಸಲಾಗದೆ ಮನನೊಂದು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 
 
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 
 
ಇನ್ನು ನಿನ್ನೆ ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಮೈಸೂರಿನ ಹುಣಸೂರಿನಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜೂನ್ ತಿಂಗಳ 8 ನೇ ತಾರೀಖಿನಿಂದ ಇಲ್ಲಿಯವರೆಗೆ ಒಟ್ಟು ಒಂಭತ್ತು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಅಂಕಲಗಿ ಗ್ರಾಮದ ರೈತ ಗುರುನಾಥ್ ಅವರ ಆತ್ಮಹತ್ಯೆ ಮೊದಲನೆಯದಾಗಿತ್ತು.  

ವೆಬ್ದುನಿಯಾವನ್ನು ಓದಿ