ವಿಮಾನ ನಿಲ್ದಾಣದಲ್ಲಿ ಸೋಂಕಿತರಿಬ್ಬರು ಎಸ್ಕೇಪ್ ಆಗಲು ಯತ್ನ- ಹಿಡಿದು ಆಸ್ಪತ್ರೆಗೆ ಸೇರಿಸಿದ ಪೊಲೀಸರು

ಶುಕ್ರವಾರ, 17 ಡಿಸೆಂಬರ್ 2021 (19:38 IST)
ಬೆಂಗಳೂರು: ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರಾರಿಯಾಗಲು ಯತ್ನಿಸಿದ ಇಬ್ಬರು ಸೋಂಕಿತರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಒಮಿಕ್ರಾನ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟು ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ಟೆಸ್ಟ್‌ನಲ್ಲಿ ನೆಗಟಿವ್ ಬಂದವ್ರಿಗೆ ಮಾತ್ರ ಹೊರ ಬರಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೋವಿಡ್ ಟೆಸ್ಟ್‌ನಲ್ಲಿ ಪಾಸಿಟಿವ್ ಕಂಡುಬಂದರೆ ಕೂಡಲೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ.
ವಿಮಾನ ನಿಲ್ದಾಣದ ಒಳಭಾಗದಲ್ಲಿ ಖಾಸಗಿ ಲ್ಯಾಬೋರೇಟರಿಯಿಂದ ಕೋವಿಡ್ ಟೆಸ್ಟ್ ನಡೆಯುತ್ತಿದೆ. ಪಾಸಿಟಿವ್ ಬಂದವರನ್ನು ಪ್ರತ್ಯೇಕವಾಗಿ ಹೊರಭಾಗಕ್ಕೆ ಕರೆದೊಯ್ದು ಸ್ಯಾನಿಟೈಸ್ ಮಾಡುತ್ತಾ, ಹೊರ ಕರೆದುಕೊಂಡು ಬರಲಾಗುತ್ತೆ. ಈ ವೇಳೆ ಆರೋಗ್ಯ ಸಿಬ್ಬಂದಿ ಎಕ್ಸಿಟ್ ಆಗುವ ಪ್ರಯಾಣಿಕರನ್ನ ತಡೆದು ಸೋಂಕಿತರನ್ನ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿದ್ದಾರೆ.
ಅದೇ ರೀತಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಕೂಡ ಬಂದಿತ್ತು. ಈ ವೇಳೆ ಇಬ್ಬರು ಸೋಂಕಿತರು ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದರು. ಪರಿಣಾಮ ಈ ಇಬ್ಬರನ್ನು ಹಿಡಿಯಲು ಹರಸಾಹಸ ಪಟ್ಟರು.
ಇಬ್ಬರು ಸೋಂಕಿತರಿಂದಾಗಿ ಏರ್‌ಪೋರ್ಟ್‌ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸೋಂಕಿತರನ್ನು ಹಿಡಿಯಲು ಸರ್ಕಸ್ ಮಾಡಿದರು. ಕೊನೆಗೆ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾದರು. ನಂತರ ನಾಲ್ವರನ್ನು ಕೂಡ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ