ಬಿಬಿಎಂಪಿ ಕಡತ ನಾಪತ್ತೆ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ಶನಿವಾರ, 31 ಜನವರಿ 2015 (14:04 IST)
ಬಿಬಿಎಂಪಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದ್ದು, ಅದಕ್ಕೆ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ಆರೋಪಿಯಾಗಿದ್ದಾರೆ. ಹಾಗಾಗಿ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಬಿಜೆಪಿ ಸದಸ್ಯರು ನಗರದ ಮೌರ್ಯ ಸರ್ಕಲ್‌ನಲ್ಲಿ ಇಂದು ಪ್ರತಿಭಟನೆ ನಡೆಸಿದರು. 
 
ನಗರದ ಮೌರ್ಯ ಸರ್ಕಲ್‌ನಿಂದ ಸಿಎಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದ ಪ್ರತಿಭಟನಾಕಾರರು, ಸಿಎಂ ನಿವಾಸವನ್ನು ಸುತ್ತುವರಿದು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಭದ್ರತೆಯಲ್ಲಿ ತೊಡಗಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಹಿಮ್ಮಟ್ಟಿಸಲು ಪ್ರಯತ್ನಿಸಿದರು. ಆದರೆ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹಲವರನ್ನು ಬಂಧಿಸಿ ಬಿಡುಗಡೆಗೊಳಿಸಿದರು. 
 
ಪ್ರತಿಭಟನೆಯಲ್ಲಿ ಬೆರಳೆಣಿಕೆ ಜನರಷ್ಟೇ ಭಾಗಿ
 
ಪ್ರತಿಭಟನೆಯು ಮಾಜಿ ಮುಪಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ನಡೆಯಿತು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಬಿಬಿಎಂಪಿ ಅವ್ಯವಹಾರದಲ್ಲಿ ತೊಡಗಿರುವ ಕಳಂಕಿತರಿಗೆ ರಕ್ಷಣೆ ಕೊಡುತ್ತಿದೆ. ಶಾಸಕ ಮುನಿರತ್ನ ಅವರು ಆರೋಪಿಯಾಗಿರುವ ಪ್ರಕರಣವನ್ನು ಸಿಐಡಿ ಅಧಿಕಾರಿ ಮಹೇಶ್ ನೂಕ್ತವಾಗಿ ತನಿಖೆ ನಡೆಸುತ್ತಿದ್ದರು. ಆದರೆ ಸರ್ಕಾರ ಅವರನ್ನು ಇದ್ದಕ್ಕಿದ್ದಂತೆ ವರ್ಗಾವಣೆಗೊಳಿಸಿದೆ. ಸರ್ಕಾರದ ಈ ವರ್ತನೆ ಸರಿಯಲ್ಲ. ಅಲ್ಲದೆ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸಬೇಕು. ತಪ್ಪಿತಸ್ಥ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
 
ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಾಮಗಾರಿಗಳಿಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ಕಾಣೆಯಾಗಿದ್ದುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಆದೇಶಿಸಲಾಗಿತ್ತು. ತನಿಖೆ ನಡೆಯುತ್ತಿದ್ದ ವೇಳೆಯಲ್ಲಿ ಶಾಸಕ ಮುನಿರಾಜು ಅವರ ಆಪ್ತನ ಮನೆಯಲ್ಲಿ ಕಡತಗಳೆಲ್ಲವೂ ಕೂಡ ದೊರೆತಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರೇ ಕಳಂಕಿತರು ಎನ್ನಲಾಗುತ್ತಿದ್ದು, ಬಿಜಿಪಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದೆ. 
------------------

ವೆಬ್ದುನಿಯಾವನ್ನು ಓದಿ