ಬೆಂಗಳೂರು: ಸೇಡಂ ತಾಲ್ಲೂಕಿನ ಮಳಖೇಡ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆ ಭಾಗ್ಯವತಿ ಅಗ್ಗಿಮಠ ಅವರದ್ದು ಆತ್ಮಹತ್ಯೆಯಲ್ಲ. ಇದೊಂದು ಸರಕಾರಿ ಪ್ರಾಯೋಜಿತ ಕೊಲೆಯಾಗಿದ್ದು, ಇದನ್ನು ಸಿಬಿಐ ತನಿಖೆಗೆ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.
ಅವರು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕಲಬುರಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ ಎಂದು ಹೇಳಿದರು.
ವೇತನ ಸಿಗದೇ ಗ್ರಂಥಪಾಲಕರ ಆತ್ಮಹತ್ಯೆ, ಬಿಲ್ ಪಾವತಿ ಆಗದೇ ಗುತ್ತಿಗೆದಾರರ ಆತ್ಮಹತ್ಯೆ, ವರ್ಗಾವಣೆ ಕಮಿಷನ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ, ನಿಗಮಗಳಲ್ಲಿ ಸರಕಾರಿ ಸಾಲ ಸಿಗದೇ ಮೈಕ್ರೋ ಫೈನಾನ್ಸ್ ಕಿರುಕುಳದಲ್ಲಿ ಬಡವರ ಆತ್ಮಹತ್ಯೆ, ಬರ ಮತ್ತು ಅತಿವೃಷ್ಟಿಯಿಂದ ಪರಿಹಾರ ಸಿಗದಿರುವ ಕಾರಣ 300ಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಜ್ಯದಲ್ಲಿರುವುದು ಮನೆಹಾಳ ಸರ್ಕಾರ ದಿವಾಳಿ ಮಾಡಿ ಜನಸಾಮಾನ್ಯರಿಗೆ ಆರನೇ ಗ್ಯಾರಂಟಿಯಾಗಿ ಆತ್ಮಹತ್ಯೆ ಭಾಗ್ಯವನ್ನು ನೀಡಿದೆ ಎಂದು ಆಕ್ರೋಶ ಹೊರಹಾಕಿದರು.
ಇವರು ಕಾಂಗ್ರೆಸ್ಸಿನ ಸಚಿವರಲ್ಲ; ಯಮ ಕಿಂಕರರು; ಸಾವಿನ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ದೂರಿದರು. ಇದೊಂದು ಕೊಲೆಗಡುಕರ ಸರಕಾರ; ಈ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದರು.