ಬೈಕ್ ಡಿಕ್ಕಿ: ಇಬ್ಬರು ಯುವಕರು ಸಜೀವ ದಹನ

ಸೋಮವಾರ, 29 ಜೂನ್ 2015 (09:24 IST)
ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿಕೊಂಡ ಬೆಂಕಿಯಲ್ಲಿ ಇಬ್ಬರು ಯುವಕರು ಸಜೀವ ದಹನರಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ
 
ತಾವರೆಕೆರೆ ಸಮೀಪದ ಚನ್ನೇನಹಳ್ಳಿ ಬಳಿ ಭಾನುವಾರ ರಾತ್ರಿ ಸುಮಾರು 7.50 ರ ಸುಮಾರಿಗೆ ಘಟನೆ ನಡೆದಿದ್ದು, ಸಾವನ್ನಪ್ಪಿದವರನ್ನು ಧನಂಜಯ್ ಮತ್ತು ಸಂಪತ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಂದ್ರು ಎಂಬಾತನ ದೇಹ 85% ಪ್ರತಿಶತ  ಸುಟ್ಟು ಹೋಗಿದ್ದು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಧನಂಜಯ್ ಮತ್ತು ಚಂದ್ರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. 
 
ಅಪಘಾತದಿಂದ ಪೆಟ್ರೋಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದ್ದು,  ಬೈಕ್ ಕೆಳಗಡೆ ಸಿಕ್ಕಿ ಹಾಕಿಕೊಂಡಿದ್ದ ಕಾಲುಗಳನ್ನು ಹೊರಕ್ಕೆ ತೆಗೆಯುವಲ್ಲಿ ವಿಫಲರಾದ ಯುವಕರು ನೋಡ ನೋಡುತ್ತಿದ್ದಂತೆ ಬೆಂಕಿಯಲ್ಲಿ ಸುಟ್ಟು ಕರಕಲಾದರು . ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಚಂದ್ರುವನ್ನು ದಾರಿಹೋಕರು ಆಸ್ಪತ್ರೆಗೆ ಸೇರಿಸಿದ್ದಾರೆ. 
 
ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ