ದಕ್ಷಿಣ ಕನ್ನಡ ಜಿಲ್ಲೆಯನ್ನೇ ಸುಟ್ಟು ಹಾಕುತ್ತೇವೆ: ಬಿಜೆಪಿ ಸಂಸದ ಕಟೀಲ್

ಸೋಮವಾರ, 2 ಜನವರಿ 2017 (13:56 IST)
ಪಕ್ಷದ ಕಾರ್ಯಕರ್ತನ ಹತ್ಯೆ ಕುರಿತಂತೆ ಮಂಗಳೂರು ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸುಟ್ಟುಹಾಕುತ್ತೇವೆ ಎಂದು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. 
ಮುಂಬರುವ 10 ದಿನಗಳಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ, ಜನತೆಗೆ ರಕ್ಷಣೆ ಕೊಡದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಸುಟ್ಟು ಹಾಕುತ್ತೇವೆ ಎಂದು ಗುಡುಗಿದ್ದಾರೆ. ನಳೀನ್ ಕುಮಾರ್ ಕಟೀಲ್ ಭಾಷಣಕ್ಕೆ ನೆರೆದಿದ್ದ ಪಕ್ಷದ ಕಾರ್ಯಕರ್ತರು ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟಿ ಸ್ಪಂದಿಸಿರುವುದು ಆಘಾತ ಮೂಡಿಸಿದೆ.
 
ಪಕ್ಷದ ಕಾರ್ಯಕರ್ತ ಕಾರ್ತಿಕ್ ರಾಜ್ ಹತ್ಯೆಯನ್ನು ವಿರೋಧಿಸಿ ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಕೊಣಾಜೆ ಪೊಲೀಸ್ ಠಾಣೆಯ ಬಳಿಯಿರುವ ಸ್ಥಳಕ್ಕೆ ಆಗಮಿಸಿದ ಕಟೀಲ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ.
 
ಬಿಜೆಪಿ ಪಕ್ಷದ ಕಾರ್ತಿಕ್ ರಾಜ್ ಎಂಬಾತನನ್ನು ಎರಡು ತಿಂಗಳುಗಳ ಹಿಂದೆ ಹತ್ಯೆ ಮಾಡಲಾಗಿತ್ತು. ಆದರೆ, ಪೊಲೀಸರು ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸದಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ