ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

Krishnaveni K

ಶನಿವಾರ, 2 ಆಗಸ್ಟ್ 2025 (17:12 IST)
ಬೆಂಗಳೂರು: ರಾಹುಲ್ ಗಾಂಧಿಯವರು ಚುನಾವಣಾ ಅಕ್ರಮದ ಹೇಳಿಕೆಯ ಮೂಲಕ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ. ಅವರ ಹೇಳಿಕೆ ಮತ್ತು ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಆ. 5ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧೀಜಿ ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಲಿದ್ದೇವೆ ಎಂದು ತಿಳಿಸಿದರು. ರಾಹುಲ್ ಗಾಂಧಿಯವರು ಇದೇ 5ರಂದು ಬೆಂಗಳೂರಿನಲ್ಲಿ ನಾಟಕ ಮಾಡಲು ಹೊರಟಿದ್ದಾರೆ ಎಂದು ದೂರಿದರು.

ಪಕ್ಷದ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಜನರಿಗೆ ತಿಳಿಸುವ ಉದ್ದೇಶವಿದೆ ಎಂದು ಹೇಳಿದರು. ರಾಹುಲ್ ಗಾಂಧಿಯವರು ಬರುತ್ತಾರೆಂಬ ಕಾರಣಕ್ಕೆ ರಾಜ್ಯ ಸರಕಾರವು ನಿನ್ನೆ ಫ್ರೀಡಂ ಪಾರ್ಕಿನಲ್ಲಿ ಕಾಂಪೌಂಡನ್ನು ಒಡೆದು ಹಾಕಿ ಅಲ್ಲಿದ್ದ ಮರವನ್ನೂ ಕಡಿದು ಹಾಕಿಸಿದೆ. ರಾಹುಲ್ ಗಾಂಧಿ, ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
 
ಕಾಂಗ್ರೆಸ್ ಪಕ್ಷ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ಒಂದು ಹೊಸ ಚರ್ಚೆ ಮತ್ತು ಹೊಸ ವರಸೆ ಪ್ರಾರಂಭ ಮಾಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯವೂ ಒಳಗೊಂಡಂತೆ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಅಕ್ರಮ ನಡೆದಿದೆ; ಬಿಜೆಪಿ, ಚುನಾವಣಾ ಆಯೋಗದ ದುರ್ಬಳಕೆಯನ್ನು ಮಾಡಿಕೊಂಡಿದೆ ಎಂಬ ಆರೋಪವನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕಾಂಗ್ರೆಸ್ಸಿನ ಮಾರ್ಗದರ್ಶನವಿಲ್ಲದ ಕ್ಷಿಪಣಿಯಂತಿರುವ ಸುಪ್ರೀಂ ನಾಯಕ ಆದ ರಾಹುಲ್ ಗಾಂಧಿ ಅವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
 
ಹತಾಶ ರಾಹುಲ್ ಗಾಂಧಿಯವರ ಕಪಟ ನಾಟಕ
ರಾಹುಲ್ ಗಾಂಧಿ ಅವರು ಗೊಂದಲದಲ್ಲಿದ್ದಾರೆ. ಸೋಲಿನ ಅವಮಾನ ಮತ್ತು ಹತಾಶರಾಗಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಈ ದೇಶದ ಜನರ ವಿಶ್ವಾಸವನ್ನು ಪಡೆದುಕೊಳ್ಳುವಲ್ಲಿ ವಿಫಲರಾದ ರಾಹುಲ್ ಗಾಂಧಿಯವರು ಒಂದು ಕಪಟ ನಾಟಕವನ್ನು ಪ್ರಾರಂಭ ಮಾಡಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

ಚುನಾವಣೆಗಳಲ್ಲಿ ಅಕ್ರಮ ನಡೆದಿರುವುದಕ್ಕೆ ನನ್ನ ಬಳಿ 100 ಪ್ರತಿಶತ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಅವರ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ಹೇಳಿಕೆಗೆ ಧ್ವನಿಗೂಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಚುನಾವಣೆಯಲ್ಲಿ ಅಕ್ರಮವಾಗಿರುವ ಬಗ್ಗೆ ಮತ್ತು ಚುನಾವಣಾ ಆಯೋಗದಲ್ಲಿ ದುರ್ಬಳಕೆ ಆಗಿದೆ ಎನ್ನುವ ಮಾಹಿತಿ ಅಥವಾ ಪುರಾವೆ ಇದ್ದರೆ. ಅದನ್ನು ರಾಜ್ಯ ಹೈಕೋರ್ಟಿಗೆ ಅಥವಾ ಸುಪ್ರೀಂ ಕೋರ್ಟಿಗೆ ಪುರಾವೆಗಳನ್ನು ನೀಡಿ ಪ್ರಶ್ನಿಸಬಹುದಾಗಿತ್ತು ಎಂದು ಆಕ್ಷೇಪಿಸಿದರು. 
 
ಇವರು ಇಂದು ದೇಶದಲ್ಲಿ ಮತ್ತು ರಾಜ್ಯದಲ್ಲಿ ಗೊಂದಲವನ್ನು ಸೃಷ್ಟಿ ಮಾಡುವುದು, ಚುನಾವಣಾ ಆಯೋಗದ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ವ್ಯವಸ್ಥೆಯ ಮೇಲೆ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ ಎಂದು ಟೀಕಿಸಿದರು. ರಾಹುಲ್ ಗಾಂಧಿ ಅವರು ಬಹಳ ಹತಾಶರಾಗಿದ್ದಾರೆ. 2014, 2019 ಮತ್ತು 2024 ರ ಲೋಕಸಭಾ ಚುನಾವಣೆಯ ಸತತ ಸೋಲುಗಳಿಂದ ಹತಾಶರಾಗಿರುವ ರಾಹುಲ್ ಗಾಂಧಿ ಅವರು, ತಮ್ಮ ನಾಯಕತ್ವದ ಬಗ್ಗೆ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.
 
ಕೇಂದ್ರದಲ್ಲಿ ನರೇಂದ್ರ ಮೋದಿ ಜೀ ಅವರು ಸತತವಾಗಿ 3ನೇ ಬಾರಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟ ಅಧಿಕಾರಕ್ಕೆ ಬಂದು ಮೋದಿ ಜೀ ಅವರ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಮೋದಿ ಜೀ ಅವರು ಪ್ರಧಾನಮಂತ್ರಿ ಸ್ಥಾನದಲ್ಲಿ ಕೂತಿರುವುದನ್ನು ನೋಡಲು- ಸಹಿಸಲು ಆಗುತ್ತಿಲ್ಲ. ದೇಶದ ಪ್ರಗತಿಯನ್ನು ರಾಹುಲ್ ಗಾಂಧಿಯವರಿಗೆ ಸಹಿಸಲು ಆಗುತ್ತಿಲ್ಲ. ಇದರ ಪರಿಣಾಮವೇ ಇಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವದ ವಿರುದ್ಧವಾಗಿ ಮತ್ತು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಕಳೆದುಕೊಂಡು ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.
 
ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕ್ರಮ
ಇದು ದೇಶದ ಜನರನ್ನು ಅಡ್ಡದಾರಿಗೆ ಎಳೆಯುವ ಪ್ರಯತ್ನ. ಗೊಂದಲ ಮೂಡಿಸುವ ಕೆಲಸ ಎಂದು ಟೀಕಿಸಿದ ಅವರು, ಇದು ಗಂಭೀರ ವಿಚಾರ ಎಂದು ನುಡಿದರು. ರಾಹುಲ್ ಗಾಂಧಿಯವರು ಇದೇ 5ರಂದು ಬೆಂಗಳೂರಿಗೆ ಆಗಮಿಸುವುದು, ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುವುದು ನಮಗೆ ಆತಂಕ ತಂದಿಲ್ಲ; ಕಾಂಗ್ರೆಸ್ ಪಕ್ಷದ ಈ ನಡವಳಿಕೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕ್ರಮ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು.
 
1975ರಲ್ಲಿ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರು ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಅಂಥದ್ದೇ ಒಂದು ಸಂದರ್ಭವನ್ನು ಸೃಷ್ಟಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಲೋಕಸಭಾ ಚುನಾವಣೆಯಲ್ಲಿ ಸೋತಾಗ ಒಮ್ಮೆ ರಾಹುಲ್ ಅವರು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದರು. ಹಿಂದೆ ಮಹಾರಾಷ್ಟ್ರ ಚುನಾವಣೆಯಲ್ಲಿ ಸೋತ ನಂತರ ಇದೇರೀತಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದರು. ಆಯೋಗವು ಪುರಾವೆ ಕೇಳಿದರೆ ಕೊಡುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
 
ನಿಮ್ಮ ಅಧಿಕಾರಿಗಳ ಮೇಲೆ ವಿಶ್ವಾಸ- ಹಿಡಿತ ಇಲ್ಲವೇ?
ರಾಹುಲ್ ಗಾಂಧಿಯವರದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಒಂದು ಅಪಾಯಕಾರಿ ನಡವಳಿಕೆ ಎಂದು ದೂರಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟವು 19 ಸ್ಥಾನಗಳನ್ನು ಗೆದ್ದಿತ್ತು. ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎಂಬ ಕಾರಣಕ್ಕೆ ಅಲ್ಲಿ ಅಕ್ರಮ ಆಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ಆರೋಪಿಸುತ್ತಾರೆ. ನಮ್ಮ ಸಂಸದ ಪಿ.ಸಿ.ಮೋಹನ್ ಅವರು ಬೆಂಗಳೂರು ಕೇಂದ್ರದಲ್ಲಿ ಚುನಾವಣೆ ಗೆದ್ದಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರ ಗರಿಷ್ಠ ಲೀಡ್ ನೀಡಿದೆ. ಅಲ್ಲಿ ಮತ್ತು ರಾಜಾಜಿನಗರದಲ್ಲಿ ಅಕ್ರಮ ಆಗಿದೆ ಎನ್ನುತ್ತಿದ್ದಾರೆ. ನಿಮ್ಮದೇ ಅಧಿಕಾರಿಗಳು ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಲ್ಲವೇ ಎಂದು ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ನಿಮ್ಮ ಅಧಿಕಾರಿಗಳ ಮೇಲೆ ವಿಶ್ವಾಸ ಇಲ್ಲವೇ? ಅವರ ಮೇಲೆ ಹಿಡಿತ ಇಲ್ಲವೇ ಎಂದು ಕೇಳಿದರು.
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ