ಹಾಲಿನ ದರ ಮತ್ತೆ ಏರಿಕೆ, ನೀವು ಸಿದ್ದರಾಮಯ್ಯ ಅಲ್ಲ ಕತ್ತರಿ ರಾಮಯ್ಯ ಎಂದ ಬಿಜೆಪಿ

Krishnaveni K

ಶನಿವಾರ, 19 ಅಕ್ಟೋಬರ್ 2024 (09:45 IST)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ನೀವು ಸಿದ್ದರಾಮಯ್ಯ ಅಲ್ಲ ಜನರ ಜೇಬಿಗೆ ಕತ್ತರಿ ಹಾಕುವ ಕತ್ತರಿ ರಾಮಯ್ಯ ಎಂದಿದೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಿತ್ತು. ಇದರ ಬೆನ್ನಲ್ಲೇ ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕಲಾಗಿತ್ತು. ಇದೀಗ ಮತ್ತೊಮ್ಮೆ ರೈತರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಸಂಕಷ್ಟಗಳ ಕೂಪಕ್ಕೆ ತಳ್ಳಿರುವ ಸಿದ್ದರಾಮಯ್ಯನವರೇ, ತಮ್ಮ ಹೆಸರನ್ನು ಕತ್ತರಿರಾಮಯ್ಯ ಎಂದು ಬದಲಾಯಿಸಿಕೊಳ್ಳುವುದು ಒಳಿತು. ಮತ್ತೆ ಹಾಲಿನ ದರ ಏರಿಕೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

ಕೆಲವೇ ದಿನಗಳ ಮೊದಲು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಲಿನ ದರ ಏರಿಕೆ ಮಾಡುವುದಾಗಿ ಘೋಷಿಸಿದ್ದರು. ನಾವು ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುತ್ತಿದ್ದೇವೆ. ಆದರೆ ಬಿಜೆಪಿಯವರಿಗೆ ರೈತರಿಗೆ ಒಳ್ಳೆಯಾಗುವುದು ಬೇಕಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ