ನಾಳೆ ಸುಪ್ರೀಂನಲ್ಲಿ ಗಡಿ ವಿವಾದದ ವಿಚಾರಣೆ

ಮಂಗಳವಾರ, 29 ನವೆಂಬರ್ 2022 (19:33 IST)
ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು. ಪಟ್ಟಣದ ಸರ್ಕೀಟ್​ ಹೌಸ್​ನಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಕಳೆದ ವಾರ ಕರ್ನಾಟಕ ಸಾರಿಗೆ ನಿಗಮದ ಬಸ್​ಗಳ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಿ ಮಸಿ ಬಳಿಯಲಾಗಿತ್ತು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯಬಾರದು ಎಂದು ತಾಕೀತು ಮಾಡಿದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದೆ. ಅಶಾಂತಿಗೆ ಇದು ಕಾರಣವಾಗಬಾರದು ಎನ್ನುವ ಕಾರಣಕ್ಕೆ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಭೆ ನಡೆಸಲಾಯಿತು ಎಂದು ಹೇಳಿದರು. ಸುಪ್ರೀಂಕೋರ್ಟ್​ ಒಂದು ವೇಳೆ ನಾಳೆಯೇ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸರು ಮೂರು ಕಡೆ ಜಂಟಿ ಚೆಕ್​ಪೋಸ್ಟ್ ಮಾಡಿದ್ದಾರೆ. ಪ್ರತಿದಿನ 400ಕ್ಕೂ ಹೆಚ್ಚು ಕರ್ನಾಟಕದ ಬಸ್​ಗಳು ಮಹಾರಾಷ್ಟ್ರಕ್ಕೆ ಹೋಗುತ್ತವೆ, ಅಲ್ಲಿಂದ 175ಕ್ಕೂ ಹೆಚ್ಚು ಬಸ್​ಗಳು ಕರ್ನಾಟಕಕ್ಕೆ ಬರುತ್ತವೆ. ಅಲ್ಲಿ ನಮ್ಮ ವಾಹನಗಳಿಗೆ ಮತ್ತು ಜನರಿಗೆ, ಇಲ್ಲಿ ಅವರ ವಾಹನಗಳಿಗೆ ಮತ್ತು ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ