ನೋಟ್ ಬ್ಯಾನ್ ವಿಚಾರದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ ದೊಂಬರಾಟ: ರಮೇಶ್ ಜಿಗಜಿಣಗಿ

ಮಂಗಳವಾರ, 17 ಜನವರಿ 2017 (19:12 IST)
ನೋಟ್ ಬ್ಯಾನ್ ನಿರ್ಧಾರವನ್ನು ಜನಸಾಮಾನ್ಯರು ಒಪ್ಪಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್‌ನವರು ರಾಜಕೀಯ ದೊಂಬರಾಟ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಕಿಡಿಕಾರಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸಿಕೊಳ್ಳಲಿ. ಅಗತ್ಯ ಬಿದ್ದರೆ ಮತ್ತಷ್ಟು ಹಣ ತರುತ್ತೇವೆ ಎಂದು ಭರವಸೆ ನೀಡಿದರು.
 
ರಾಜ್ಯ ಬಿಜೆಪಿ ಘಟಕದಲ್ಲಿ ಗೊಂದಲಗಳಿರುವುದು ನಿಜ. ಆದಷ್ಟು ಬೇಗ ಕೇಂದ್ರ ನಾಯಕರು ಬಗೆಹರಿಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ನಡೆದ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಬಣದ ಮಾರಾಮಾರಿ ಕುರಿತು ಮಾಹಿತಿ ಇಲ್ಲ. ಒಂದು ವೇಳೆ ಆ ರೀತಿ ಗಲಾಟೆ ನಡೆದಿದ್ದರೆ ಅದು ತಪ್ಪು ಎಂದು ಅಭಿಪ್ರಾಯಪಟ್ಟರು.
 
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ರಾಯಣ್ಣ ಬ್ರಿಗೇಡ್‌ಗೆ ಕೇಂದ್ರ ನಾಯಕರ ವಿರೋಧವಿದೆ. ರಾಜ್ಯ ಬಿಜೆಪಿ ಘಟಕದಲ್ಲಿನ ಗೊಂದಲಗಳ ಕುರಿತು ಕೇಂದ್ರ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ