ಬೆಂಗಳೂರು: ಕುರುಬರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರ ಸಂಬಂಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕುರುಬರ ಎಸ್.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ ಸಿದ್ದಣ್ಣ ತೇಜಿ ಅವರು ನೀಡಿದ ದೂರಿನಂತೆ ಇದೀಗ ಪ್ರಕರಣ ದಾಖಲಾಗಿದೆ.
ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಶುಕ್ರವಾರ ಬೆಳಿಗ್ಗೆ ಸಿದ್ದಣ್ಣ ತೇಜಿ ದೂರು ನೀಡಿದ್ದಾರೆ. ಆ ದೂರನ್ನು ಸಂಬಂಧಿಸಿದ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.
ಕುರುಬರನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಛಲವಾದಿ ನಾರಾಯಣಸ್ವಾಮಿ ಹಾಗೂ ಬೆಂಗಳೂರು, ಮೈಸೂರಿನಲ್ಲಿ ಶ್ರೀವತ್ಸ ಅವರು ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಅವರನ್ನು ವಿರೋಧಿಸುವ ಭರದಲ್ಲಿ ಇಡೀ ಕುರುಬ ಸಮಾಜಕ್ಕೆಅವಮಾನ ಹಾಗೂ ದೌರ್ಜನ್ಯ ಎಸಗಿದ್ದಾರೆ. ಪರಿಶಿಷ್ಟ ಪಂಗಡದವರು ಹಾಗೂ ವಾಲ್ಮೀಕಿ ಸಮಾಜದವರು ಕುರುಬ ಸಮಾಜದ ಮೇಲೆ ದಂಗೆ ಎಳೆಬೇಕು ಎನ್ನುವ ರೀತಿಯಲ್ಲಿ ಸಾಮಾಜಿಕ ಜಾಲ ತಾಣ ಹಾಗೂ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದಾರೆ.
ಸಮುದಾಯದ ಜನರನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದಣ್ಣ ತೇಜಿ ಅವರು ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ.