ಮೈಸೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಭಾರೀ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮಣಿಯದೇ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದೆ.
ಈ ಮಧ್ಯೆ ಇಂದು ಮೈಸೂರಿನ ಶ್ರೀಕ್ಷೇತ್ರ ಚಾಮುಂಡಿಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ, ನಂಬಿಕೆ, ಭಕ್ತಿ ಮತ್ತು ಇತಿಹಾಸಕ್ಕೆ ಮತ್ತೊಂದು ಹೆಸರೇ ಚಾಮುಂಡಿ ಬೆಟ್ಟ. ಸರ್ಕಾರವು ಉದ್ಘಾಟಕರಿಗೆ ತಾಯಿ ಚಾಮುಂಡಿ ಇತಿಹಾಸ, ಉತ್ಸವ, ಆರಾಧನೆ, ಸಂಪ್ರದಾಯವನ್ನು ಮೊದಲು ತಿಳಿಸಿ ಹೇಳಬೇಕು.
ಇದೀಗ ಉದ್ಘಾಟಕರಾಗಿ ಆಯ್ಕೆಯಾಗಿರುವವರು, ಈ ಸ್ಥಾನಕ್ಕೆ ಅರ್ಹರೋ ಅಥವಾ ಇಲ್ಲವೋ ಎಂಬ ಚರ್ಚೆ ಮಾಡುವುದಿಲ್ಲ ಎಂದರು.
ಮೈಸೂರಿನ ಶ್ರೀಕ್ಷೇತ್ರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ, ಮಾಜಿ ಸಂಸದರಾದ ಶ್ರೀ ಪ್ರತಾಪ್ ಸಿಂಹ ಅವರು, ಶಾಸಕರಾದ ಶ್ರೀವತ್ಸ ಅವರು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಸರ್ಕಾರ ಯಾರನ್ನೋ ತೃಪ್ತಿಪಡಿಸುವ ಕೆಲಸ ಮಾಡುವುದು ಸರಿಯಲ್ಲ. ಚಾಮುಂಡಿ ತಾಯಿಯ ಮನಸ್ಸು ಗೆಲ್ಲುವ ಕೆಲಸ ಮಾಡಿದರೆ ದೇಶ ಮತ್ತು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ದಸರಾ ಉದ್ಘಾಟಕರು ನಮ್ಮ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಲಿ ಎಂದು ಹೇಳಿದರು.