ಸಿಎಂ ಬದಲಾವಣೆ ಬಳಿಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆಯಿಟ್ಟು ವಿವಾದ ಸೃಷ್ಟಿಸಿದ ಚಂದ್ರಶೇಖರನಾಥ ಸ್ವಾಮೀಜಿ

Krishnaveni K

ಶನಿವಾರ, 29 ಜೂನ್ 2024 (12:55 IST)
ಬೆಂಗಳೂರು: ಇತ್ತೀಚೆಗಷ್ಟೇ ಸಿದ್ದರಾಮಯ್ಯ ತಮ್ಮ ಸಿಎಂ ಪದವಿಯನ್ನು ಡಿಕೆ ಶಿವಕುಮಾರ್ ಗೆ ಬಿಟ್ಟುಕೊಡಲಿ ಎಂದು ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಈಗ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟು ಮತ್ತೊಂದು ಚರ್ಚೆಗೆ ಕಾರಣವಾಗಿದ್ದಾರೆ.

ಸಿಎಂ ವಿಚಾರವಾಗಿ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಬಣದ ನಡುವೆ ರಾಜಕೀಯ ತಿಕ್ಕಾಟಕ್ಕೆ ನಾಂದಿ ಹಾಡಿದೆ. ಇದರ ನಡುವೆಯೇ ಈಗ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಸ್ವಾಮೀಜಿ ಧ್ವನಿಯೆತ್ತಿದ್ದಾರೆ.

ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂದು ಇಬ್ಭಾಗವಾಗಬೇಕು. ಆಗ ಮಾತ್ರ ಉತ್ತರ ಕರ್ನಾಟಕದ ಅಭಿವೃದ್ಧಿಯಾಗಲು ಸಾಧ್ಯ ಎಂದು ನಾನು ಕೆಂಪೇಗೌಡ ಜಯಂತಿ ಸಮಾರಂಭದಲ್ಲೇ ತಿಳಿಸಿದ್ದೆ. ನನ್ನ ಹೇಳಿಕೆಗೆ ಈಗಲೂ ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆ ಶಿವಕುಮಾರ್ ಸಾಕಷ್ಟು ಕಷ್ಟಪಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಊಟ ಮಾಡಿದ್ದಾರೆ. ಈಗ ಮತ್ತೆ ಒಂದು ವರ್ಷ ಊಟ ಮಾಡಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಗೆ ಸ್ಥಾನ ಬಿಟ್ಟುಕೊಡಲಿ ಎಂದಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ