ಎಲೆಕ್ಷನ್ ಮುಗಿಯಿತು, ಇನ್ನು ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ತಾಕೀತು

Krishnaveni K

ಗುರುವಾರ, 23 ಮೇ 2024 (13:15 IST)
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪರ್ವ ಮುಗಿದಿದೆ. ಇನ್ನೇನಿದ್ದರೂ ಕೆಲಸದ ಕಡೆಗೆ ಗಮನ ಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಸಲಹೆ ನೂಚನೆಗಳನ್ನು ನೀಡಿದ್ದಾರೆ.

 ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಹೆಚ್.ಕೆ. ಪಾಟೀಲ್‌, ಕೆ.ಹೆಚ್.‌ ಮುನಿಯಪ್ಪ, ಚೆಲುವರಾಯಸ್ವಾಮಿ, ಬೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್.‌ ಎಸ್.‌ ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. 
 
ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ.
 
ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. 
 
ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. 
ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು.
 
ನೀತಿ ಸಂಹಿತೆ ಜೂನ್ ಆರರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. 
 
ಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. 
 
ಚುನಾವಣೆ ಮುಗಿದಿದೆ. ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಬೇಕು. 
 
ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. 
 
ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ. ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ.  ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು.
 
ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದರು.

ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ನೀಡಿದ ಸೂಚನೆಯ ಹೈಲೈಟ್ಸ್ ಇಲ್ಲಿದೆ:
1. ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ.
 
2. ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ.
 
3. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ.
 
4. ಜೂನ್‌ 6 ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಯಿತು. ಜೂನ್‌ ಕೊನೆಯ ವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ.
 
5. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಲು ಸೂಚಿಸಿದರು.
 
6. ಮೈಸೂರಿನ ಎರಡು ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ. ನರಸೀಪುರ ತಾಲ್ಲೂಕು ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ..
 
7. ಕಲುಷಿತ ನೀರು ಕುಡಿದು ಕಾಲರಾ ಉಂಟಾಗಿದೆ. ಸಂಬಂಧಪಟ್ಟ ಎಂಜಿನಿಯರುಗಳು ಕುಡಿಯಲು ಯೋಗ್ಯ ನೀರು ಒದಗಿಸಲು ವಿಫಲವಾಗಿದ್ದಾರೆ. ಕುಡಿಯುವ ನೀರಿನ ಮೂಲ ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂದು ಪರಿಶೀಲಿಸದೇ ಇರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. 
ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿರುವುದು. 
 
8. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಬಹುದು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು.
 
ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
 
ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ,  ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ