ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿದ್ರೂ ಆ ಗ್ರಾಮಕ್ಕೆ ಸಿಕ್ತು ಬಂಪರ್

ಗುರುವಾರ, 27 ಜೂನ್ 2019 (17:29 IST)
ಭಾರೀ ಮಳೆಯಿಂದಾಗಿ ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮುಂದೂಡಲ್ಪಟ್ಟಿತ್ತು. ಆದರೂ ಆ ಗ್ರಾಮದ ಅಭಿವೃದ್ಧಿಗೆ ಸಿಎಂ ಬಂಪರ್ ಯೋಜನೆ ಘೋಷಣೆ ಮಾಡಿದ್ದಾರೆ.

ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಯುವಕರ ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ದೂರದೃಷ್ಟಿ ಹೊಂದಿದೆ ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು.

ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಹೈದರಾಬಾದ್ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಲ್ಲಿ ಅವಶ್ಯಕವಿರುವ ಶಾಲಾ ಕೊಠಡಿಗಳ ಮಾಹಿತಿ ಪಡೆಯಲಾಗಿದೆ. ಮುಂದಿನ 8-10 ದಿನಗಳಲ್ಲಿ ಸಭೆ ಕರೆದು ಎಲ್ಲ ಶಾಲೆಗಳ ದುರಸ್ತಿ, ಹೆಚ್ಚುವರಿ ಕಟ್ಟಡ ಮತ್ತು ಶಿಕ್ಷಕರ ಕೊರತೆ ನೀಗಿಸುವಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು. ಹೈ.ಕ. ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ಹಾಗೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷ ಬೇರೆ ಜಿಲ್ಲೆಗಳಿಗೆ ಹೋಲಿಕೆಯಾಗುವ ಹಾಗೆ ಹೈ.ಕ. ಭಾಗದ ಜಿಲ್ಲೆಯ ಫಲಿತಾಂಶವೂ ಹೆಚ್ಚಿಸುವಲ್ಲಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.

ಈ ಹಿಂದೆ ಕಲಬುರಗಿ ಜಿಲ್ಲೆಯ ಹೇರೂರ ಬಿ. ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಮಳೆಯಿಂದಾಗಿ ಮುಂದೂಡಲ್ಪಟ್ಟಿತ್ತು. ಈ ಗ್ರಾಮದಲ್ಲಿ ಸುಮಾರು 500 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಗ್ರಾಮದ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆ.

ಗ್ರಾಮ ವಾಸ್ತವ್ಯ ಮಾಡುವ ಹಳ್ಳಿಗಳಲ್ಲಿದೆ ಎಲ್ಲ ಹಳ್ಳಿಗಳಲ್ಲಿಯೂ ಮೂಲ ಭೂತ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಜರುಗಿಸಲಾಗುವುದು. ಗ್ರಾಮ ವಾಸ್ತವ್ಯದ ಮೂಲಕ ಮೈತ್ರಿ ಸರಕಾರವನ್ನು ಜನರ ಹತ್ತಿರಕ್ಕೆ ಕರೆದುಕೊಂಡು ಹೋಗಲು ಪ್ರಯತ್ನಿಸಲಾಗುತ್ತಿದೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ