ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದಿವಾಳಿತನ ಮತ್ತು ಸಾಲದ ಸುಳಿಗೆ ತಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಸ್ವಯಂಘೋಷಿತ ಆರ್ಥಿಕ ತಜ್ಞ, ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತ ಮತ್ತು ತಪ್ಪು ಹಣಕಾಸಿನ ನಿರ್ವಹಣೆಯಿಂದ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಯಾವ ಅಧೋಗತಿಗೆ ತಲುಪುತ್ತಿದೆ ಎನ್ನುವುದನ್ನು ಮಹಾಲೇಖಪಾಲರ (ಸಿಎಜಿ) ವರದಿ ಎಳೆಎಳೆಯಾಗಿ ಬಿಚ್ಚಿಟ್ಟಿದೆ ಎಂದಿದ್ದಾರೆ.
ವರದಿಯ ಪ್ರಮುಖಾಂಶಗಳನ್ನು ಅವರು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ವಿತ್ತೀಯ ಕೊರತೆ ಭಾರಿ ಏರಿಕೆ
2022–23ರಲ್ಲಿ ₹46,623 ಕೋಟಿ ಇದ್ದ ವಿತ್ತೀಯ ಕೊರತೆ, 2023–24ರಲ್ಲಿ ₹65,522 ಕೋಟಿಗೆ ಏರಿದೆ. ಏರುತ್ತಿರುವ ಈ ವಿತ್ತೀಯ ಕೊರತೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಅವೈಜ್ಞಾನಿಕ ಗ್ಯಾರಂಟಿಗಳು ಕರ್ನಾಟಕವನ್ನು ಹೇಗೆ ದಿವಾಳಿತನದತ್ತ ತಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದ್ದು, ಇದರಿಂದ ಸಾಲದ ಕುಣಿಕೆ ಬಿಗಿಯಾಗುತ್ತಿದೆ.
ಕಾಂಗ್ರೆಸ್ ಸರ್ಕಾರವು ಮಾರುಕಟ್ಟೆಯಿಂದ ₹63,000 ಕೋಟಿ ಸಾಲ ಪಡೆದಿದ್ದು, ಇದು ಕಳೆದ ವರ್ಷಕ್ಕಿಂತ ₹37,000 ಕೋಟಿ ಹೆಚ್ಚು. ಇದು ಮುಂದಿನ ತಲೆಮಾರಿನ ಮೇಲೆ ಭಾರಿ ಬಡ್ಡಿ ಹೊರೆ ಹಾಕುತ್ತದೆ ಎಂದು ಸಿಎಜಿ ವರದಿ ಎಚ್ಚರಿಕೆ ನೀಡಿದೆ.
ಮೂಲಸೌಕರ್ಯ ಹೂಡಿಕೆ ಕುಸಿತ
ರಸ್ತೆ, ನೀರಾವರಿ, ಮೂಲಸೌಕರ್ಯ ಹೂಡಿಕೆಯಲ್ಲಿ ₹5,229 ಕೋಟಿ ಕಡಿತವಾಗಿದ್ದು, ಇದರಿಂದ ಅಪೂರ್ಣ ಯೋಜನೆಗಳು ಶೇ 68ರಷ್ಟು ಏರಿಕೆ ಕಂಡಿವೆ ಎಂದು ಸಿಎಜಿ ವರದಿ ಬಹಿರಂಗಪಡಿಸಿದೆ. ರಾಜ್ಯದ ಭವಿಷ್ಯವೇ ಅಪಾಯದಲ್ಲಿದೆ ಎಂದು ಎಚ್ಚರಿಕೆ ನೀಡಿದೆ.