ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರು ಮತ್ತು ಸಚಿವರು ಕಿತ್ತಾಡಿಕೊಂಡಿದ್ದಾರೆ.
ಸಚಿವರುಗಳ ಮೇಲೆ ಶಾಸಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಬಾರಿ ಸಚಿವರುಗಳ ಬಗ್ಗೆ ಶಾಸಕರು ಎಐಸಿಸಿ ನಾಯಕರ ಮುಂದೆಯೂ ದೂರು ನೀಡಿದ ಉದಾಹರಣೆಯಿದೆ.
ನಿನ್ನೆಯ ಸಭೆಯಲ್ಲಿ ಸಚಿವರು ನಮ್ಮ ಕೈಗೆ ಸಿಗುತ್ತಿಲ್ಲ, ನಮ್ಮ ಕ್ಷೇತ್ರದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ತಮ್ಮ ಅಭಿಪ್ರಾಯವನ್ನು ಕೇಳುತ್ತಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನಕ್ಕೂ ಸಚಿವರು ಗೈರಾಗುತ್ತಿದ್ದಾರೆ. ಹೀಗಾಗಿ ಇಲ್ಲೂ ಸಿಗಲ್ಲ, ಸದನದ ಹೊರಗೆಯೂ ಕೈಗೆ ಸಿಗಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸುವಾಗ ಮಾತಿಗೂ ನಮ್ಮ ಬಳಿ ಹೇಳಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗೇ ಮುಂದುವರಿದರೆ ಬಹಿರಂಗವಾಗಿಯೇ ಈ ಬಗ್ಗೆ ಹೇಳಿಕೆಗಳನ್ನು ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ.