ಡಿ.ಕೆ.ರವಿ ನಿಗೂಢ ಸಾವು ಪ್ರಕರಣ: ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

ಗುರುವಾರ, 19 ಮಾರ್ಚ್ 2015 (10:48 IST)
ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವು ಪ್ರಸ್ತುತ ಹೈಕೋರ್ಟ್ ಮೆಟ್ಟಿಲೇರಿದ್ದು, ತುಮಕೂರು ಜಿಲ್ಲೆಯ ನಿವಾಸಿಯೋರ್ವರು ಮುಖ್ಯ ನ್ಯಾಯಮೂರ್ತಿ ಹಾಗೂ ರಿಜಿಸ್ಟಾರ್ ಜನರಲ್ ಅವರಿಗೆ ಪತ್ರ ಬರೆದಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
 
ಈ ಪತ್ರವನ್ನು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ನಿವಾಸಿ ಜಿ.ಮಧುಸೂಧನ್ ಅವರು ಬರೆದಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರಲ್ಲಿ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟ್ ರಿಜಿಸ್ಟ್ರಾರ್ ಮೂಲಕ ಮನವಿ ಪತ್ರ ಸಲ್ಲಿಸಿದ್ದಾರೆ. 
 
ಇನ್ನು ರವಿ ಅವರು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ, ಅವರ ಸಾವಿನಂದ ರಾಜ್ಯಕ್ಕೆ ತುಂಬಲಾಗದ ನಷ್ಟವಾಗಿದ್ದು, ಇದೊಂದು ಅಸಹಜ ಸಾವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲೇಬೇಕು ಎಂದು ಒತ್ತಾಯಿಸಿ ರಾಜ್ಯ ವಕೀಲರ ಸಂಘವು ಡಿ.ಕೆ.ರವಿ ಅವರ ಸಾವನ್ನು ಖಂಡಿಸಿ ನಿನ್ನೆ ಮಧ್ಯಾಹ್ನ 1.30ಕ್ಕೆ ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ರಾಜ್ಯ ವಕೀಲರ ಸಂಘದ ಅಧ್ಯಕ್ಷ ಹೆಚ್.ಸಿ.ಸೀತಾರಾಂ ಅವರ ನೇತೃತ್ವದಲ್ಲಿ ನಡೆದಿತ್ತು. 

ವೆಬ್ದುನಿಯಾವನ್ನು ಓದಿ