ಅಪಘಾತದಲ್ಲಿ ಬಿಸಿಲೆ ಚಿತ್ರ ನಿರ್ದೇಶಕ ಸಂದೀಪ್ ದಾರುಣ ಸಾವು

ಸೋಮವಾರ, 11 ಜನವರಿ 2016 (10:44 IST)
ಬೈಕ್ ಸ್ಕಿಡ್ ಆಗಿ ಬಿದ್ದು ಕನ್ನಡ ಚಿತ್ರ ನಿರ್ದೇಶಕ ಸಂದೀಪ್‌ (38) ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ನಸುಕಿನ ಜಾವ 3.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ದಿಗಂತ್ ಅಭಿನಯದ 'ಬಿಸಿಲೆ' ಚಿತ್ರದ ಸಹ ನಿರ್ದೇಶಕರಾಗಿದ್ದ ಸಂದೀಪ್, ಚಿತ್ರವೊಂದರ ಶೂಟಿಂಗ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತ ಸಂದೀಪ್‌, ರಾಜರಾಜೇಶ್ವರಿ ನಗರದ ಬೆಮೆಲ್ ಲೇ ಔಟ್ ನಿವಾಸಿಯಾಗಿದ್ದು, ಇಂದು ಬೆಳಗ್ಗೆ ಶೂಟಿಂಗ್‌ಗಾಗಿ ಬೈಕ್‌ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಬೇಕು ಎನ್ನುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
 
ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. 
 
10 ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದ ಸಂದೀಪ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕನ್ನಡ ಚಿತ್ರರಂಗದ ಅನೇಕ ನಟನಟಿ, ನಿರ್ದೇಶಕರು ಆಸ್ಪತ್ರೆಗೆ ಹೊರಗೆ ನೆರೆದಿದ್ದಾರೆ.

ವೆಬ್ದುನಿಯಾವನ್ನು ಓದಿ