ಬರ ಪರಿಸ್ಥಿತಿ: ಜಿಲ್ಲಾಧಿಕಾರಿಗಳ ಜತೆ ಸಿಎಂ ಸಭೆ

ಮಂಗಳವಾರ, 27 ನವೆಂಬರ್ 2018 (14:36 IST)
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ವಿಪಕ್ಷದ ನಾಯಕರು ದೂರುತ್ತಿರುವ ಬೆನ್ನಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸಿಎಂ, ಡಿಸಿ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು 100 ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವುದು ಸೇರಿದಂತೆ ಆಡಳಿತಕ್ಕೆ ಸಂಬಂಧಿಸಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಬಾರಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಬರಪೀಡಿತ ಜಿಲ್ಲೆಗಳಲ್ಲಿ ಸಮಾರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜನ ಗುಳೆ ಹೋಗದಂತೆ ತಡೆಯಬೇಕು. ಸಮರ್ಪಕ ಕುಡಿಯುವ ನೀರು ಒದಗಿಸಲು ಕೈಗೊಳ್ಳಬೇಕಾದ ಕ್ರಮಗಳು, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು ಆಗಬೇಕಾಗಿರುವ ಕೆಲಸಗಳು, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಬಗ್ಗೆಯೂ ಮುಖ್ಯಮಂತ್ರಿ ಕುಮಾರಸ್ವಾಮಿ  ಸಭೆಯಲ್ಲಿ ಚರ್ಚೆ ನಡೆಸುವರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಪಾಲ್ಗೊಳ್ಳುವರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ