ಕಾಂಗ್ರೆಸ್‌ನ ಕುರ್ಚಿ ಗುದ್ದಾಟದಲ್ಲಿ ರೈತರು ಅನಾಥರಾಗಿದ್ದಾರೆ: ಆರ್‌ ಅಶೋಕ್

Sampriya

ಭಾನುವಾರ, 20 ಅಕ್ಟೋಬರ್ 2024 (15:51 IST)
ಬೆಂಗಳೂರು: 'ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು' ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದ್ದಾರೆ.

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ  ಹಲವಾರು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ. ಹಲವಾರು ಕಡೆ ಕಟಾವಿಗೆ ಬಂದಿದ್ದ ಬೆಳೆಗಳು ಮಳೆಯಿಂದ
ನಾಶವಾಗಿವೆ. ಅನೇಕ ಕಡೆ ಬೆಳೆಗಳಿಗೆ ಕೊಳೆರೋಗ, ಸುಟ್ಟರೋಗ ಬಂದು ಹಾಳಾಗಿವೆ. ರೈತರು ಇಂತಹ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದರೂ ಮುಖ್ಯಮಂತ್ರಿಗಳಾಗಲಿ, ಕೃಷಿ ಸಚಿವ ಎನ್‌ಸಿ ಚೆಲುವರಾಯಸ್ವಾಮಿ ಅವರಾಗಲಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಾಗಲಿ ರೈತರ ಸಂಕಷ್ಟದ ಬಗ್ಗೆ ಈವರೆಗೂ ಚಕಾರ ಎತ್ತಿಲ್ಲ.

ರೈತರ ಜಮೀನುಗಳಿಗೆ ಹೋಗಿ ಧೈರ್ಯ ಹೇಳಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರುಗಳ, ಶಾಸಕರು ಈವರೆಗೂ ಆಕಡೆ ತಲೆ ಹಾಕಿಲ್ಲ. ಮುಖ್ಯಮಂತ್ರಿಗಳಿಗೆ ಕುರ್ಚಿ ಉಳಿಸಿಕೊಳ್ಳುವ ಯೋಚನೆ ಆದರೆ ಸಚಿವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸ್ಥಾನ ಉಳಿಸಿಕೊಳ್ಳುವ ಯೋಚನೆ. ಇನ್ನು ಶಾಸಕರ ಅನುದಾನದ ಚಿಂತೆ. ಒಟ್ಟಿನಲ್ಲಿ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ನಾಡಿನ ರೈತರು ದಿಕ್ಕಿಲ್ಲದ ಅನಾಥರಾಗಿದ್ದಾರೆ.

ಕಳೆದ ವರ್ಷ ಬರ ಪರಿಸ್ಥಿತಿ ಇದ್ದಾಗ ಸರಿಯಾದ ಸಮಯಕ್ಕೆ ಸಮೀಕ್ಷೆ ನಡೆಸದೆ, ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡಿದ್ದ ಕಾಂಗ್ರೆಸ್
 ಸರ್ಕಾರ, ಈಗಲಾದರೂ ಮತ್ತೆ ಅದೇ ತಪ್ಪು ಮಾಡುತ್ತಿದೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,500ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಇನ್ನಷ್ಟು ರೈತರು ಪ್ರಾಣ ಕಳೆದುಕೊಳ್ಳುವ ಯೋಚನೆ ಮಾಡುವ ಮುನ್ನ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೃಷಿ ಸಚಿವ ಎನ್‌ಸಿ ಚೆಲುವರಾಯಸ್ವಾಮಿ
 ಹಾಗು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನ ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ