ಪರಿಹಾರದಲ್ಲಿ ರೈತರಿಗೆ ತಾರತಮ್ಯ: ಸರ್ಕಾರದ ವಿರುದ್ಧ ಸದನದಲ್ಲಿ ಯಡ್ಡಿ ವಾಗ್ದಾಳಿ

ಸೋಮವಾರ, 3 ಆಗಸ್ಟ್ 2015 (14:54 IST)
ಲೋಕಸಭೆಯಲ್ಲಿ ಇಂದು ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಂಸದ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ರೈತರ ಆತ್ಮಹತ್ಯೆ ವಿಷಯವನ್ನು ಪ್ರಸ್ತಾಪಿಸಿದ್ದು, ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ. 
 
ಸದನದಲ್ಲಿ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದಲ್ಲಿ ಕೇವಲ ಆರು ತಿಂಗಳ ಒಳಗೆ 250 ಮಂದಿ ರೈತರು ವಿವಿಧ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯವು ರಾಷ್ಟ್ರದಲ್ಲಿ ಎರಡನೇ ಸ್ಥಾನದಲ್ಲಿದೆ. ಅಲ್ಲದೆ ರಾಜ್ಯ ಸರ್ಕಾರವು ರೈತರಿಗೆ ನೀಡುತ್ತಿರುವ ಪರಿಹಾರ ವಿಚಾರದಲ್ಲಿ ತಾರತಮ್ಯ ಎಸಗುತ್ತಿದೆ. ಆದ್ದರಿಂದ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.  
 
ಬಳಿಕ, ಕೃಷಿ ಯಂತ್ರೋಪಕರಣಗಳ ಖರೀದಿಯಲ್ಲಿ ಸರ್ಕಾರ ರೈತರಿಗೆ ಶೇ. 50ರಷ್ಟು ಸಬ್ಸಿಡಿ ನೀಡಬೇಕು. ಅಲ್ಲದೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಎಲ್ಲಾ ರಾಜ್ಯಗಳಿಗೂ ಕೂಡ ಭೇಟಿ ನೀಡುತ್ತಿದ್ದಾರೆ. ಆದರೆ ಕರ್ನಾಟಕಕ್ಕೆ ಮಾತ್ರ ಇದುವರೆಗೂ ಭೇಟಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು. 
 
ಕಬ್ಬು ಬೆಳೆಗಾರರು ಬಾಕಿ ಹಣ ಪಾವತಿಸಿಲ್ಲವೆಂಬ ಕೊರಗಿನಿಂದ ಕೇಲವರು ಆತ್ಮಹತ್ಯೆಗೆ ಶರಣಾದರೆ, ಮತ್ತೆ ಕೆಲವರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಯಡಿಯೂರಪ್ಪ ಅವರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ