ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಮಹಿಳೆ ಸಾವು

ಶುಕ್ರವಾರ, 24 ಏಪ್ರಿಲ್ 2015 (13:39 IST)
ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಕಸದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಹಿಳೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ಮಲ್ಲೇಶ್ವರಂನ 5 ನೇ ಮುಖ್ಯರಸ್ತೆಯಲ್ಲಿ ನಡೆದಿದೆ. 
 
ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಗೀತಾರಾಣಿ(55) ಎಂದು ಗುರುತಿಸಲಾಗಿದ್ದು, ದ್ವಿತೀಯ ದರ್ಜೆ ಗುಮಾಸ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. 
 
ಪ್ರಕರಣದ ವಿವರ: ಎಂದಿನಂತೆ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕಚೇರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಮಹಿಳೆಯ ತಲೆಗೆ ತೀವ್ರ ತೆರನಾದ ಅಗಾಧ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 
 
ಇನ್ನು ಅಪಘಾತದ ಬಳಿಕ ಲಾರಿ ಚಾಲನು ಲಾರಿ ಸಮೇತ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಮೃತ ಮಹಿಳೆಯ ಶರೀರವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. 
 
ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಮಲ್ಲೇಶ್ವರಂ ಪೊಲೀಸರು, ಲಾರಿ ಹಾಗೂ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.  

ವೆಬ್ದುನಿಯಾವನ್ನು ಓದಿ