ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

Sampriya

ಮಂಗಳವಾರ, 12 ಆಗಸ್ಟ್ 2025 (14:50 IST)
ತುಮಕೂರು: ಕಾಂಗ್ರೆಸ್‌ ಹೈಕಮಾಂಡ್‌ನ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡ ಕೆ.ಎನ್‌. ರಾಜಣ್ಣ ಅವರ ತವರು ಕ್ಷೇತ್ರ ಮಧುಗಿರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. 

ರಾಜಣ್ಣ ಅಭಿಮಾನಿಗಳು ಮಧುಗಿರಿ ಪಟ್ಟಣ ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಜಮಾವಣೆಗೊಂಡರು. ಬಸ್ ನಿಲ್ದಾಣದ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಅವರನ್ನು ಪೊಲೀಸರು ತಡೆದರು. 

ಎಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.  ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. 

ತುಮಕೂರು ಗೇಟ್‌ನ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತರು. ಇದೇ ವೇಳೆ, ಬೇಕರಿಯೊಂದಕ್ಕೆ ನುಗ್ಗಲು ಪ್ರಯತ್ನಿಸಿದರು. ಎಂಜಿ ಕ್ರೀಡಾಂಗಣದ ಬಳಿ ಬೆಂಬಲಿಗರು ಹೈಡ್ರಾಮಾ ನಡೆಸಿದರು. ಅಭಿಮಾನಿಯೊಬ್ಬ ವಿಷ ಕುಡಿಯಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು. ಆತನನ್ನು ತಕ್ಷಣವೇ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೊಬ್ಬ ಮೈಮೇಲೆ ಪೆಟ್ರೋಲ್‌ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಸಡಿಲ ಹೇಳಿಕೆಗಳ ಮೂಲಕವೇ ಪಕ್ಷದೊಳಗಡೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸಂಪುಟದಿಂದ ವಜಾಗೊಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ