ಗಣೇಶೋತ್ಸವದಲ್ಲಿ ಚೂರಿ ಇರಿದು ಹಿಂದೂ ಸಂಘಟನೆ ಕಾರ್ಯದರ್ಶಿ ಹತ್ಯೆ

ಬುಧವಾರ, 4 ಸೆಪ್ಟಂಬರ್ 2019 (19:11 IST)
ಗಣೇಶೋತ್ಸವ ಸಂದರ್ಭದಲ್ಲಿ ಯುವಕನನ್ನು ಚೂರಿಯಿಂದ ಇರಿದು  ಕೊಲೆ ಮಾಡಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ರಾತ್ರಿ ಈ ಘಟನೆ ನಡೆದಿದೆ. 

ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲ್ಲೂಕು ಘಟಕದ ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಕೊಲೆಯಾದ ಯುವಕನಾಗಿದ್ದಾನೆ. ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬುವವರು ಕಾರ್ತಿಕ್‌ಗೆ  ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಾರ್ತಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದ ಬಳಿಕ ಸಂಪ್ಯ ಗಣೇಶೋತ್ಸವದ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣಗೊಂಡಿತ್ತು. ಕೊಲೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.‌ ಆದರೆ ಹಳೆ ದ್ವೇಷವೇ ಕಾರಣ ಎಂಬ ಮಾತುಗಳು ಕೇಳಿಬಂದಿದೆ. ಸಂಪ್ಯ ಪೊಲೀಸರು ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ