ಮುಂದೆಯೂ ಬಿಜೆಪಿಗೆ ನಾನೇ ರಾಜ್ಯಾಧ್ಯಕ್ಷ: ಬಿವೈ ವಿಜಯೇಂದ್ರ

Krishnaveni K

ಸೋಮವಾರ, 3 ಫೆಬ್ರವರಿ 2025 (12:05 IST)
ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ  ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹೇಳಿದರು.
 
ತವರು ಜಿಲ್ಲೆ ಶಿವಮೊಗ್ಗದಲ್ಲಿ ಇಂದು ಬೆಳಗ್ಗೆ ಮಾಧ್ಯಮದವರ ಜತೆ ಮಾತಾಡಿದ ಅವರು, ಪಕ್ಷದ ಸಂಘಟನಾತ್ಮಕ ಚುನಾವಣೆಯ ಕುರಿತು ಮಾಹಿತಿ ಹಂಚಿಕೊಂಡರು. ಬಿಜೆಪಿಯ ಹಿರಿಯ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂಬ ವಿಚಾರವಾಗಿ ಪತ್ರಕರ್ತರು ಕೇಳದ ಪ್ರಶ್ನೆಗೆ ವಿಜಯೇಂದ್ರ ಉತ್ತರಿಸಿದರು.
 
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಈ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದೇವೆ. ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯದ ಅಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎನ್ನುವ  ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ