ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

Sampriya

ಶನಿವಾರ, 21 ಫೆಬ್ರವರಿ 2026 (18:48 IST)
ರಾಮನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಗುದ್ದಾಟ ತೀವ್ರ ಪೈಪೋಟಿ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಶಾಸಕ ಎಚ್‌ಎ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಭಾರೀ ಕುತೂಹಲವನ್ನು ಮೂಡಿಸಿದೆ. 

ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಫೆ. 26ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಬರಲು ಸೂಚನೆ ನೀಡಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ ಎಂದು ಹಾರೈಸಿದ್ದಾರೆ. 

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಬಯಕೆಯಾಗಿದೆ ಎಂದು ಹೇಳಿದರು. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ಸಹ ನಾಯಕತ್ವ ಗೊಂದಲವನ್ನು ಪರಿಹರಿಸುವಂತೆ ಹೈಕಮಾಂಡ್‌ಗೆ ಒತ್ತಾಯ ಮಾಡಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಡಿರುವ ಪೋಸ್ಟ್‌ ಕುರಿತು ಪ್ರತಿಕ್ರಿಯಿಸಿದ ಹುಸೇನ್, ‘ನಾನೂ ಸೇರಿದಂತೆ ಪಕ್ಷದ 140 ಶಾಸಕರೂ ನಾಯಕತ್ವ ಬದಲಾವಣೆ ಬೇಕು ಎಂದು ಕೇಳುದ್ದೇವೆ. ಇದರಲ್ಲಿ ಪಟ್ಟಭದ್ರ ಹಿತಾಸಕ್ತಿಯಾಗಲಿ, ಗುಂಪುಗಾರಿಕೆಯಾಗಲಿ ಇಲ್ಲ’ ಎಂದು ಕೌಂಟರ್ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ