ತುಂಗಭದ್ರಾ ಡ್ಯಾಮ್‌ಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ: ನಿಟ್ಟುಸಿರು ಬಿಟ್ಟ ಲಕ್ಷಾಂತರ ರೈತರು

Sampriya

ಭಾನುವಾರ, 18 ಆಗಸ್ಟ್ 2024 (09:48 IST)
ಕೊಪ್ಪಳ: ತುಂಗಭದ್ರಾ ಡ್ಯಾಮ್‌ನಲ್ಲಿ ಮುರಿದಿದ್ದ 19ನೇ ಗೇಟ್‍ನಲ್ಲಿ ಎಲ್ಲಾ ಐದು ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ.

ಶುಕ್ರವಾರ ಮೊದಲ ಎಲಿಮೆಂಟ್ ಅಳವಡಿಸಲಾಗಿತ್ತು. ಶನಿವಾರ ಸಂಜೆ ಎಲ್ಲಾ ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ ಡ್ಯಾಂನಿಂದ ಹೊರ ಹೋಗುತ್ತಿದ್ದ ನೀರು ಬಂದ್ ಆಗಿದೆ. ಈ ಮೂಲಕ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಈ ಭಾಗದ ಲಕ್ಷಾಂತರ ರೈತರು ನಿಟ್ಟುಸಿರುಬಿಟ್ಟಿದ್ದಾರೆ.

ಸದ್ಯ ಜಲಾಶಲಯದ ಎಲ್ಲ 33 ಗೇಟ್‍ಗಳನ್ನು ಮುಚ್ಚಲಾಗಿದೆ ಎಂದು ಟಿಬಿ ಡ್ಯಾಂ ಮಂಡಳಿ ತಿಳಿಸಿದೆ. ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಸಾಧ್ಯವಾಗಿದೆ. ಇನ್ನು ಆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ಈ ಬಗ್ಗೆ ಪ್ರತಿಕ್ರಿಯಿಸಿರುವ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು, ರೈತರ ಬದುಕು ಹಸನುಗೊಳಿಸಲು ನಾನು ಈ ಇಳಿವಯಸ್ಸಿನಲ್ಲೂ ದೂರದ ಹೈದರಾಬಾದ್‍ನಿಂದ ಆಗಮಿಸಿ ಸ್ಟಾಪ್ ಲಾಗ್ ಗೇಟ್ ಅಳವಡಿಸಿರುವೆ. ಹರಿಯುವ ನೀರಿನಲ್ಲೇ ಗೇಟ್ ಅಳವಡಿಕೆ ಸವಾಲಿನ ಕೆಲಸ ಆಗಿತ್ತು. ಆದರೂ ನಮ್ಮ ಮನೆ ದೇವರಾದ ತಿರುಪತಿ ತಿಮ್ಮಪ್ಪನ ಆಶೀರ್ವಾದದಿಂದ ಯಶಸ್ಸು ಸಾಧಿಸಿದ್ದೇವೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಟಿಬಿ ಡ್ಯಾಂನ 19ನೇ ಗೇಟ್ ನಲ್ಲಿ ಸ್ಟಾಪ್ ಲಾಗ್ ಅಳವಡಿಸುವ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದಿದೆ. ಸದ್ಯ ಡ್ಯಾಂನಿಂದ ಪೋಲಾಗುತ್ತಿದ್ದ ನೀರನ್ನು ನಿಲ್ಲಿಸುವಲ್ಲಿ ತಂಡ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ