ರಾಜ್ಯಪಾಲರ ಭಾಷಣಕ್ಕೆ ಜಗದೀಶ್ ಶೆಟ್ಟರ್ ಆಕ್ರೋಶ

ಸೋಮವಾರ, 6 ಫೆಬ್ರವರಿ 2017 (15:14 IST)
ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿದ ಭಾಷಣ ಸುಳ್ಳಿನ ಕಂತೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
 
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಭಾಷಣದಲ್ಲಿ 8200 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ. ಇಷ್ಟು ಘಟಕಗಳು ಆರಂಭವಾಗಿಯೇ ಇಲ್ಲ. 8200 ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿರುವುದನ್ನು ಸಾಬೀತು ಪಡಿಸಿದರೇ ಅವರು ಹೇಳಿದ ಹಾಗೇ ಕೇಳುತ್ತೇನೆ ಎಂದು ಸವಾಲ್ ಎಸೆದರು. 
 
ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಶೂಟೌಟ್ ಪ್ರಕರಣಗಳು ನಡೆಯುತ್ತಿವೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿವೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ರಾಜ್ಯ ಸರಕಾರ ಸಫಲವಾಗಿದೆ ಎಂದು ಹೇಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ವಿಧಾನಮಂಡಲದ ಅಧಿವೇಶನ ಕೇವಲ ನಾಲ್ಕು ದಿನಗಳ ಕಾಲ ನಡೆಸುವುದು ಯಾವ ಪುರುಷಾರ್ಥಕ್ಕೆ, ನಾಲ್ಕು ದಿನಗಳಲ್ಲಿ ಬರ ಪರಿಸ್ಥಿತಿ ಮೇಲೆ ಚರ್ಚೆ ನಡೆಸಲು ಸಾಧ್ಯವೇ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ