ವಿಕಾಸಸೌಧದಲ್ಲಿ ಸಫಾಯಿ ಕರ್ಮಚಾರಿಗಳ ಸಭೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ನಿವೇಶನ ನೀಡುವ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು ಪೌರಕಾರ್ಮಿಕರಿಗೆ ಆಗುತ್ತಿರುವ ಶೋಷಣೆಗಳನ್ನು ತಪ್ಪಿಸಲು ಕಠಿಣ ಕ್ರಮ ಕೈಗೊಳ್ಳಲಿದೆ, ಅಲ್ಲದೆ ಪೌರಕಾರ್ಮಿಕರನ್ನು ಶೋಷಣೆ ಮುಕ್ತರನ್ನಾಗಿ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಲಿದೆ ಎಂದರು.
ಅನುಕಂಪದ ನೌಕರಿ: ಮ್ಯಾನ್ಹೋಲ್ನಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ಕಳೆದುಕೊಂಡ ಪೌರ ಕಾರ್ಮಿಕರ ಕುಟುಂಬದ ಅವಲಂಬಿತರಿಗೆ ಪರಿಹಾರ ಹಾಗೂ ಅನುಕಂಪದ ಆಧಾರದ ನೌಕರಿ ನೀಡಲು ಚಿಂತನೆ ನಡೆಸಲಾಗಿದೆ ಎಂದ ಸಮಾಜ ಕಲ್ಯಾಣ ಸಚಿವರು ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಕೊಡಿಸಿ ಅದರ ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆವತಿಯಿಂದ ಭರಿಸಲು ಉದ್ದೇಶಿಸಲಾಗಿದೆ ಮತ್ತು ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳ ವೇತನ, ಸವಲತ್ತು ಹಾಗೂ ಖಾಯಂ ಮಾಡಲು ಸರ್ಕಾರ ಆದಷ್ಟು ಬೇಗ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಸಚಿವರು ತಿಳಿಸಿದರು.