ಕೈ-ಕಮಲ ಕಾರ್ಯಕರ್ತರ ಮಾರಾಮಾರಿ ಪ್ರಕರಣ ; ಮೂರು ಪ್ರತ್ಯೇಕ ಎಫ್ಐಆರ್ ದಾಖಲು

ಶನಿವಾರ, 18 ಮಾರ್ಚ್ 2023 (12:05 IST)
ಫ್ಲೆಕ್ಸ್‌ ಹಾಕುವ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರ ನಡುವೆ ಮಾರಾಮಾರಿ ನಡೆದ  ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.ಘಟನೆಯ ಕುರಿತು ಪೊಲೀಸರೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಇದಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನೀಡಿರುವ ದೂರು - ಪ್ರತಿದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಆರೋಪದ‌ ಮೇಲೆ ಮೂವತ್ತಾರು ಜನರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಲ್ಲದೇ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ನೀಡಿರುವ ದೂರಿನನ್ವಯ ಹತ್ತು‌ ಜನರ ವಿರುದ್ಧ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಪ್ರತಿಯಾಗಿ ಬಿಜೆಪಿ ಕಾರ್ಯಕರ್ತೆ ರಮ್ಯಾ ಎಂಬುವವರು ಸಹ ದೂರು ನೀಡಿದ್ದು, ಅದರನ್ವಯ ಎಂಟು ಜನರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
 
ಫ್ಲೆಕ್ಸ್ ಹಾಕುವ ವಿಚಾರಕ್ಕೆ ನಿನ್ನೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಬಿಜಿಎಸ್ ನೈದಾನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ  ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಭಾನುವಾರ ಬಿಜಿಎಸ್ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಫ್ಲೆಕ್ಸ್​ ಹಾಕಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ತಡೆದಿದ್ದ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದ ಹಿಂದಿನ ದಿನ ಫ್ಲೆಕ್ಸ್​ ಹಾಕಿಕೊಳ್ಳಿ ಎಂದಾಗ ಎರಡೂ ಗುಂಪುಗಳ ನಡುವೆ ತಳ್ಳಾಟ, ನೂಕಾಟ ನಡೆದಿತ್ತು. ಬಳಿಕ  ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ