ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಭ್ರಷ್ಟಾಚಾರ ಕಡಿಮೆಯಾಗುತ್ತಿಲ್ಲ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರೂ ಆಗಿರುವ ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಅವರು ಸ್ವಪಕ್ಷದ ವಿರುದ್ಧವೇ ಬಾಂಬ್ ಸಿಡಿಸಿದ್ದಾರೆ.
ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚು ತಾಂಡವಾಗುತ್ತಿದೆ ಎಂದು ಯಲಬುರ್ಗಾ ಶಾಸಕರೂ ಆಗಿರುವ ರಾಯರಡ್ಡಿ ಕಿಡಿಕಾಡಿದರು.
ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ ಎಂದು ಟೀಕಿಸಿದರು.
ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸಿನಲ್ಲಿ ಸೇರಿಸಿ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್ ಆರ್. ಅವರಿಗೆ ಸೂಚಿಸಿದರು.