ಜಾಗತಿಕ ನಾಯಕನಾಗಿಸಲು ಕರ್ನಾಟಕ ದೊಡ್ಡ ಕೊಡುಗೆ ನೀಡಲಿದೆ : ಬೊಮ್ಮಾಯಿ

ಸೋಮವಾರ, 13 ಫೆಬ್ರವರಿ 2023 (18:37 IST)
ಬೆಂಗಳೂರು : ಭಾರತವನ್ನ ಜಾಗತಿಕ ನಾಯಕನಾಗಿಸಲು ಕರ್ನಾಟಕ ಅತ್ಯಂತ ದೊಡ್ಡ ಕೊಡುಗೆ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಚಾಲನೆಗೊಂಡ ಏರೋ ಇಂಡಿಯಾ 2023 ಏರ್ ಶೋ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿಗಳ ಆಶಯದಂತೆ ಕರ್ನಾಟಕ ರಾಜ್ಯವು ಈ ಕಾರ್ಯಸಾಧನೆಗೆ ಆರ್ಥಿಕತೆ, ಸಾಮಾಜಿಕ ವ್ಯವಸ್ಥೆ ಹಾಗೂ ರಕ್ಷಣಾ ವಲಯದಲ್ಲಿ ದೊಡ್ಡ ಕೊಡುಗೆ ನೀಡಲಿದೆ ಎಂದು ಹೇಳಿದರು.

ಏರೋ ಇಂಡಿಯಾ 14ನೇ ಆವೃತ್ತಿಯು ಗಾತ್ರ, ಪ್ರದರ್ಶನ ಮತ್ತು ಕಾರ್ಯವೈಖರಿಯ ದೃಷ್ಟಿಯಿಂದ ಅತ್ಯಂತ ವಿಶೇಷ ಆವೃತ್ತಿಯಾಗಿದೆ. ರಕ್ಷಣಾ ವಲಯ ಹಾಗೂ ಏರ್ ಶೋ ಪ್ರದರ್ಶನದಲ್ಲಿ ಭಾರತ ತನ್ನ ಸಾಮರ್ಥ್ಯವನ್ನ ನಿರೂಪಿಸಿದೆ. ಕೋವಿಡ್ ಸಂದರ್ಭದಲ್ಲಿ ಪ್ಯಾರಿಸ್ ಏರ್ ಶೋ ಸ್ಥಗಿತಗೊಂಡಾಗ, ನಮ್ಮ ಏರ್ ಶೋ ಯಶಸ್ವಿಯಾಗಿ ಜರುಗಿತ್ತು. ಈ ಬಾರಿ ವಸ್ತು ಪ್ರದರ್ಶನದ ವಿಸ್ತೀರ್ಣ ಹಾಗೂ ಪ್ರದರ್ಶಕರ ಸಂಖ್ಯೆಯೂ ಹೆಚ್ಚಾಗಿದೆ ಎಂದು ವಿವರಿಸಿದರು.

 
45 ಸಾವಿರಕ್ಕೂ ಹೆಚ್ಚು ಯುವಕರ ಬಳಕೆ: ರಾಜ್ಯದಲ್ಲಿ ಏರೋಸ್ಪೇಸ್ ಹಾಗೂ ರಕ್ಷಣಾ ನೀತಿಯು ಜಾರಿಯಲ್ಲಿದ್ದು, ರಕ್ಷಣಾ ಹಾಗೂ ಏರೋಸ್ಪೇಸ್ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಲು 45 ಸಾವಿರಕ್ಕೂ ಹೆಚ್ಚು ಯುವಕರನ್ನ ತೊಡಗಿಸಿಕೊಳ್ಳಲಾಗುವುದು ಎಂದರು.

ಇದೇ ವೇಳೆ ಕರ್ನಾಟಕದಲ್ಲಿ 14ನೇ ಏರೋ ಶೋ ಆಯೋಜಿಸಲು ಅವಕಾಶ ಮಾಡಿಕೊಟ್ಟಿರುವ ಪ್ರಧಾನಿಗಳು ಹಾಗೂ ರಕ್ಷಣಾ ಸಚಿವರಿಗೆ ಸಿಎಂ ಧನ್ಯವಾದ ಅರ್ಪಿಸಿದರು. ರಕ್ಷಣಾ ವಲಯದ ಶಕ್ತಿ ಹಾಗೂ ಸಾಮರ್ಥ್ಯ ವೃದ್ಧಿಗೆ ಕರ್ನಾಟಕ ತನ್ನ ಕೊಡುಗೆಯನ್ನು ನಿರಂತರವಾಗಿ ನೀಡಲಿದೆ ಎಂದು ಶ್ಲಾಘಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ