ಕಾವೇರಿ ಸುಪ್ರೀಂ ತೀರ್ಪು: ಇಂದು ಅತ್ಯಂತ ಕರಾಳ ದಿನ ಎಂದ ಕುಮಾರಸ್ವಾಮಿ
ಮಂಗಳವಾರ, 20 ಸೆಪ್ಟಂಬರ್ 2016 (17:46 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಪಾಲಿಗೆ ಇಂದು ಅತ್ಯಂತ ಕರಾಳ ದಿನ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ವ್ಯವಸ್ಥೆಯ ಹೆಸರಿನಲ್ಲಿ ರಾಜ್ಯದ ಜನತೆಗೆ ವಿಷ ನೀಡಲಾಗುತ್ತಿದೆ. ಒಕ್ಕೂಟ ವ್ಯವಸ್ಥೆಗೆ ಧಿಕ್ಕಾರ ಹೇಳಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರಕ್ಕೆ ಮಾನ ಮರ್ಯಾದೆ ಇದ್ರೆ ಆದೇಶವನ್ನು ವಜಾ ಮಾಡಲಿ. ರಾಜ್ಯದ ಪ್ರತಿಯೊಂದು ರಾಜಕೀಯ ಪಕ್ಷಗಳು ಪ್ರತಿಯೊಂದು ಚುನಾವಣೆಯನ್ನು ಬಹಿಷ್ಕರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರ ರಾಜ್ಯದಲ್ಲಿ ಅಧಿಕಾರ ನಡೆಸುವು ಅಗತ್ಯವೇ ಇಲ್ಲ. ರಾಜ್ಯದಲ್ಲಿ ಕೇಂದ್ರ ಸರಕಾರವೇ ಅಧಿಕಾರ ನಡೆಸಲಿದೆ. ಅಧಿಕಾರಕ್ಕಾಗಿ ಬಿಜೆಪಿ ಹಪಹಪಿಸುತ್ತಿದೆ. ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಏನು ಮಾಡುತ್ತಿದ್ದಾರೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ ರಾಜ್ಯದ ಜನತೆಯ ತೆರಿಗೆ ಹಣದಿಂದ ಕಾವೇರಿ ಜಲಾಶಯ ನಿರ್ಮಿಸಲಾಗಿದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸಿ ಎಂದು ಸೂಚನೆ ನೀಡಲು ಅವರಿಗೇನು ಅರ್ಹತೆ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ