ಜೀವನದುದ್ದಕ್ಕೂ ಸಮಾಜವಾದಿ ಸಿದ್ಧಾಂತವನ್ನೇ ಮೈಗೂಡಿಸಿಕೊಂಡು ಕೋಮುವಾದಿ ಶಕ್ತಿಗಳನ್ನು ವಿರೋಧಿಸುತ್ತಿದ್ದ ಬಂಗಾರಪ್ಪ ಕೊನೆ ಕ್ಷಣದಲ್ಲಿ ಬಿಜೆಪಿ ಸೇರಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಪರಾಭವಗೊಳಿಸಿದ್ದರು. ಅಂದು ತಂದೆಯನ್ನು ಹಿಂಬಾಲಿಸಿಕೊಂಡು ಬಿಜೆಪಿ ಸೇರಿದ್ದ ಕುಮಾರ್ ಕೆಲ ಕಾಲದ ನಂತರ ಮತ್ತೆ ಪಕ್ಷಾಂತರ ಮಾಡಿದ್ದರು.
ತಂದೆಯ ನಾಮಬಲದಿಂದ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದ ಕುಮಾರ್, ತದನಂತರ ತಂದೆ ಮತ್ತು ಕಿರಿಯ ಸಹೋದರ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಜತೆ ಮನಸ್ತಾಪ ಬೆಳೆಸಿಕೊಂಡಿದ್ದರು. ಇದು ಅವರ ರಾಜಕೀಯ ಜೀವನಕ್ಕೆ ಮುಳುವಾಗಿ ಪರಿಣಮಿಸಿತ್ತು.