ಇಂದು ಕುಮಾರ್ ಬಂಗಾರಪ್ಪ ಬಿಜೆಪಿಗೆ

ಗುರುವಾರ, 9 ಮಾರ್ಚ್ 2017 (11:28 IST)
ರಾಜ್ಯ ರಾಜಕಾರಣದಲ್ಲಿ ವರ್ಣ ರಂಜಿತ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಇಂದು ಅಧಿಕೃತವಾಗಿ ಬಿಜೆಪಿ ಸೇರುತ್ತಿದ್ದಾರೆ.

21 ವರ್ಷಗಳ ಕಾಂಗ್ರೆಸ್ ಜತೆಗಿನ ಸಂಬಂಧವನ್ನು ಕಡಿದುಕೊಂಡು ಎರಡನೆಯ ಬಾರಿಗೆ ಅವರು ಕಮಲವನ್ನೆತ್ತುತ್ತಿದ್ದಾರೆ.
 
ಜೀವನದುದ್ದಕ್ಕೂ ಸಮಾಜವಾದಿ ಸಿದ್ಧಾಂತವನ್ನೇ ಮೈಗೂಡಿಸಿಕೊಂಡು ಕೋಮುವಾದಿ ಶಕ್ತಿಗಳನ್ನು ವಿರೋಧಿಸುತ್ತಿದ್ದ ಬಂಗಾರಪ್ಪ ಕೊನೆ ಕ್ಷಣದಲ್ಲಿ ಬಿಜೆಪಿ ಸೇರಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಪರಾಭವಗೊಳಿಸಿದ್ದರು. ಅಂದು ತಂದೆಯನ್ನು ಹಿಂಬಾಲಿಸಿಕೊಂಡು ಬಿಜೆಪಿ ಸೇರಿದ್ದ ಕುಮಾರ್ ಕೆಲ ಕಾಲದ ನಂತರ ಮತ್ತೆ ಪಕ್ಷಾಂತರ ಮಾಡಿದ್ದರು.
 
ತಂದೆಯ ನಾಮಬಲದಿಂದ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಣ್ಣ ನೀರಾವರಿ ಸಚಿವರಾಗಿದ್ದ ಕುಮಾರ್, ತದನಂತರ ತಂದೆ ಮತ್ತು ಕಿರಿಯ ಸಹೋದರ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಜತೆ ಮನಸ್ತಾಪ ಬೆಳೆಸಿಕೊಂಡಿದ್ದರು. ಇದು ಅವರ ರಾಜಕೀಯ ಜೀವನಕ್ಕೆ ಮುಳುವಾಗಿ ಪರಿಣಮಿಸಿತ್ತು. 
 
ಮತ್ತೀಗ ಮರಳಿ ಬಿಜೆಪಿ ಸೇರ ಹೊರಟಿರುವ ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
 
ಸಾಧಾರಣ ಕಾರ್ಯಕರ್ತನಾಗಿ ಬಿಜೆಪಿ ಸೇರುತ್ತಿದ್ದೇನೆ.ಪಕ್ಷದ ವರಿಷ್ಠರ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ಎನ್ನುತ್ತಿರುವ ಬಂಗಾರಪ್ಪ ಚುನಾವಣೆಗೆ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದು ಇನ್ನೊಂದು ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೊತ್ತಾಗಲಿದೆ.

ವೆಬ್ದುನಿಯಾವನ್ನು ಓದಿ